ಉದಯವಾಹಿನಿ, ಗಂಗಾವತಿ: ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ನಿಧನದ ಹಿನ್ನೆಲೆ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಆದೇಶವನ್ನು ಜಾರಿ ಮಾಡಿದ್ದು ಸರ್ಕಾರಿ ಕಚೇರಿಗಳಲ್ಲಿ 3 ದಿನಗಳ ಕಾಲ ನಿತ್ಯವೂ ಅರ್ಧಕ್ಕೆ ಧ್ವಜಾರೋಹಣ ಮಾಡುವಂತೆ ಸೂಚನೆ ನೀಡಿದೆ. ಗಂಗಾವತಿ ನಗರದ ಮತ್ತು ತಾಲೂಕಿನ ಬಹುತೇಕ ಸರಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಏರಿಸಲಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಅರ್ಧಕ್ಕೆ ರಾಷ್ಟ್ರ ಧ್ವಜಾರೋಹಣ ಮಾಡದೇ ಬಿಇಓ ಅವರು ನಿರ್ಲಕ್ಷ್ಯ ತೋರಿದ್ದಾರೆ. ಇದನ್ನು ಪ್ರತಿಭಟಿಸಿ ಎಸ್.ಎಫ್.ಐ. ಕಾರ್ಯಕರ್ತರು ಕಚೇರಿ ಎದುರು ಪ್ರತಿಭಟನೆ ನಡೆಸಿ ಬಿಇಓ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ರಾಷ್ಟ್ರಧ್ವಜವನ್ನು ಅರ್ಧಕ್ಕೇರಿಸುವ ಮೂಲಕ ಗೌರವ ಸಲ್ಲಿಸುವಂತೆ ಒತ್ತಾಯಿಸಿದರು.
