ಉದಯವಾಹಿನಿ, ತುಮಕೂರು: ಮಠಕ್ಕೆ ನೀರು ಸರಬರಾಜು ಮಾಡಿದ ₹70.31 ಲಕ್ಷ ವಿದ್ಯುತ್ ಬಿಲ್ ಪಾವತಿಸುವಂತೆ ಕೋರಿ ಕೆಐಎಡಿಬಿಯು ಸಿದ್ದಗಂಗಾ ಮಠಕ್ಕೆ ನೋಟಿಸ್ ಜಾರಿ ಮಾಡಿದ್ದು, ‘ನೀರು ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಬಿಲ್ ಪಾವತಿ ಸಾಧ್ಯವಿಲ್ಲ’ ಎಂದು ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವತಿಯಿಂದ ತುಮಕೂರು ತಾಲ್ಲೂಕು ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಯವರೆಗೆ ಪೈಪ್ಲೈನ್ ಕಾಮಗಾರಿ ಪೂರ್ಣಗೊಳಿಸಲಾಗಿದೆ. 2023-2024ನೇ ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ಹರಿಸಲಾಗಿದೆ. ಈ ನೀರನ್ನು ಸಿದ್ದಗಂಗಾ ಮಠದ ದೈನಂದಿನ ಚಟುವಟಿಕೆಗಳಿಗೆ ಬಳಕೆ ಮಾಡಲಾಗಿದೆ ಎಂದು ಕೆಐಎಡಿಬಿ ಕಾರ್ಯಪಾಲಕ ಎಂಜಿನಿಯರ್ ಟಿ.ಎಸ್.ಲಕ್ಷ್ಮೀಶ್ ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.
‘ನೀರು ಸರಬರಾಜು ಮಾಡಿದ ವಿದ್ಯುತ್ ಬಿಲ್ ಮೊತ್ತ ₹70,31,438 ಹಣವನ್ನು ಬೆಸ್ಕಾಂಗೆ ಪಾವತಿಸಬೇಕಿದ್ದು, ಹಣ ಪಾವತಿಗೆ ಕೋರಿ ಕೇಂದ್ರ ಕಚೇರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಕೆರೆಯ ನೀರನ್ನು ಸಿದ್ದಗಂಗಾ ಮಠದ ದೈನಂದಿನ ಚಟುವಟಿಕೆಗಳಿಗೆ ಉಪಯೋಗಿಸಿಕೊಂಡಿದ್ದು, ಮಂಡಳಿಯ ಆರ್ಥಿಕ ಪರಿಸ್ಥಿತಿ ಸುಸ್ಥಿತಿಯಲ್ಲಿ ಇಲ್ಲದಿರುವ ಕಾರಣ ನೀರು ಸರಬರಾಜಿನ ವಿದ್ಯುತ್ ಬಳಕೆಯ ವೆಚ್ಚವನ್ನು ಮಠದ ವತಿಯಿಂದಲೇ ಭರಿಸುವಂತೆ ತಿಳಿಸಲು ಕೇಂದ್ರ ಕಚೇರಿಯಿಂದ ನಿರ್ದೇಶಿಸಲ್ಪಟ್ಟಿರುತ್ತೇನೆ’ ಎಂದು ನೋಟಿಸ್ನಲ್ಲಿ ನಮೂದಿಸಿದ್ದಾರೆ.
