ಉದಯವಾಹಿನಿ, ನವದೆಹಲಿ: ಗೃಹಸಚಿವ ಡಾ.ಜಿ. ಪರಮೇಶ್ವರ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಾಸಕರು, ಸಚಿವರ ಸಭೆ ಪ್ರತ್ಯೇಕ ನಡೆಸುತ್ತಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ನಾನು ವಿದೇಶದಿಂದ ಆಗಮಿಸುತ್ತಿದ್ದಂತೆ ಪಕ್ಷದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಡಿಮಿಡಿ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿದೇಶ ಪ್ರವಾಸದಲ್ಲಿದ್ದೆ. ಅಲ್ಲಿಂದ ಬರುತ್ತಿದ್ದಂತೆ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ಯಾರಿ ದೀದಿ ಭರವಸೆಯನ್ನು ಘೋಷಣೆ ಮಾಡಿದ್ದೇವೆ.ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ದೆಹಲಿಯಿಂದ ವಾಪಸ್ಸಾದ ಬಳಿಕ ಮಾಹಿತಿ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು.
ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಹಿಳೆಯರಿಗೆ 2 ಸಾವಿರ ರೂ. ನೀಡುತ್ತಿದ್ದು, ದೆಹಲಿಯಲ್ಲಿ 2,500 ರೂ. ನೀಡುವ ಭರವಸೆ ನೀಡಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗುತ್ತಿದೆ. ಈ ಕಾರ್ಯಕ್ರಮ ಜಾರಿಗೆ ತರಲಾಗುತ್ತಿದೆ ಎಂದರು.
ಬೆಂಗಳೂರಿನ ಜೀವನ ನಿವರ್ಹಣಾ ವೆಚ್ಚ ಕಡಿಮೆಯಿದೆ. ದೆಹಲಿಯಲ್ಲಿ ಬಾಡಿಗೆ ಸೇರಿದಂತೆ ಎಲ್ಲವೂ ದುಬಾರಿ. ಹೀಗಾಗಿ 2,500 ರೂ. ಘೋಷಿಸಲಾಗಿದೆ. ಕುಮಾರಸ್ವಾಮಿ ಭಂಡಾರದಲ್ಲಿ ಏನೇನಿದೆಯೋ ಅದೆಲ್ಲಾ ಹೊರಬರಲಿ. ಆ ಬಗ್ಗೆ ನಿಧಾನಕ್ಕೆ ತಾವು ಪ್ರತಿಕ್ರಿಯೆ ನೀಡುತ್ತೇನೆ. ಈ ಸಂದರ್ಭದಲ್ಲಿ ಹೆಚ್ಚು ಚರ್ಚೆ ಮಾಡುವುದಿಲ್ಲ. ನಿಧಾನಕ್ಕೆ ಎಲ್ಲದಕ್ಕೂ ಉತ್ತರ ನೀಡುತ್ತೇನೆ ಎಂದರು.
