ಉದಯವಾಹಿನಿ, ಬೆಂಗಳೂರು: ದೆಹಲಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಕಚೇರಿ ಇಂದಿರಾಗಾಂಧಿ ಭವನ ಉದ್ಘಾಟನೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಗೃಹಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರಿನಲ್ಲೇ ಉಳಿದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ್ದ ಪರಮೇಶ್ವರ್, ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದ್ದರು.
ಆದರೆ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಅಧಿಕೃತ ಆಹ್ವಾನ ನೀಡಿದೆ. ಉಳಿದಂತೆ ಕೆಲ ಸಚಿವರು ತಮಷ್ಟಕ್ಕೇ ತಾವು ದೆಹಲಿಗೆ ಭೇಟಿ ನೀಡಿದ್ದಾರೆ.
8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿ ಒಂದು ಬಾರಿ ಸರ್ಕಾರವನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತಂದ ತಮಗೆ ಹೈಕಮಾಂಡ್ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಿದೆ ಎಂದು ಪರಮೇಶ್ವರ್ ನಿರೀಕ್ಷಿಸಿದರು. ಅದು ಹುಸಿಯಾಗಿದೆ. ಇತ್ತೀಚೆಗೆ ಪ್ರತ್ಯೇಕ ಡಿನ್ನರ್ ಮೀಟಿಂಗ್ ಆಯೋಜಿಸಿ ವಿವಾದದ ಕೇಂದ್ರಬಿಂದುವಾಗಿದ್ದ ಪರಮೇಶ್ವರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇರುವುದು ನಾನಾ ರೀತಿಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ.
