ಉದಯವಾಹಿನಿ, ಬೆಂಗಳೂರು: ಕುಮಾರಸ್ವಾಮಿಯವರಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಆಸಕ್ತಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಕೆಲಸ ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯನ್ನು ಭೇಟಿ ಮಾಡಲು ಅವರೇನು ವಿತ್ತ ಸಚಿವರಲ್ಲ ಎಂದು ಟೀಕಿಸಿದರು.

ಕೇಂದ್ರದಿಂದ ಅನುದಾನ ತರಲು ರಾಜ್ಯದ ಸಚಿವರು ನಮ ಜತೆ ಚರ್ಚೆ ಮಾಡುವುದಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, ಮಿಸ್ಟರ್ ಕುಮಾರಸ್ವಾಮಿ ನಿಮಗೆ ಜವಾಬ್ದಾರಿ ಇಲ್ಲವೇ? ಸಚಿವರು ನಿಮ ಜತೆ ಚರ್ಚೆ ಮಾಡಬೇಕೆ?, ಈ ರಾಜ್ಯಕ್ಕೆ ಜವಾಬ್ದಾರಿ ನೀಡಬೇಕು ಎಂದು ನಿಮಗೆ ಜವಾಬ್ದಾರಿ ಇಲ್ಲವೇ?, ನಾವು ಪ್ರಧಾನಿ ಹಾಗೂ ಹಣಕಾಸು ಸಚಿವೆ ಹಾಗೂ ನಮಗೆ ಸಂಬಂಧಿಸಿದ ಇಲಾಖೆಯ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಕುಮಾರಸ್ವಾಮಿ ಭೇಟಿ ಮಾಡಲು ಅವರು ವಿತ್ತ ಸಚಿವರಲ್ಲ. ಅವರಿಗೆ ರಾಜ್ಯದ ಬಗ್ಗೆ ಆಸಕ್ತಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ. ಅವರಿಗೆ ಅವರ ವೈಯಕ್ತಿಕ ಆಸಕ್ತಿ ಹೊರತಾಗಿ ರಾಜ್ಯದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ರಾಜ್ಯ ಹಾಗೂ ದೇಶದ ಅಭಿವೃದ್ಧಿ ಬಗ್ಗೆ ಅವರಲ್ಲಿ ನಾನು ಆಸಕ್ತಿ ನೋಡಿಲ್ಲ ಎಂದು ತಿರುಗೇಟು ನೀಡಿದರು. ಬೇರೆ ರಾಜ್ಯಗಳ ಮುಖ್ಯಮಂತ್ರಿ ಗಳು ನನ್ನನ್ನು ಭೇಟಿ ಮಾಡುತ್ತಾರೆ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ನನ್ನನ್ನು ಭೇಟಿ ಮಾಡುವುದಿಲ್ಲ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ ಎಂದರು.
ಸಿಎಂ ಬದಲಾವಣೆ ಖಚಿತ ಎಂಬ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅಶೋಕ್ ಅವರು ಜ್ಯೋತಿಷ್ಯ ಕಲಿಯುತ್ತಿರುವ ಬಗ್ಗೆ ಕೇಳಿ ಬಹಳ ಸಂತೋಷವಾಯಿತು. ನನಗೂ ಜ್ಯೋತಿಷ್ಯ ಕೇಳುವ ಚಟ ಇದೆ. ಅವರು ಬಿಡುವಿನ ಸಮಯ ನೀಡಿದಾಗ ನಾನು ಹೋಗಿ ಶಾಸ್ತ್ರ ಕೇಳುತ್ತೇನೆ ಎಂದರು.

Leave a Reply

Your email address will not be published. Required fields are marked *

error: Content is protected !!