ಉದಯವಾಹಿನಿ, ಬೆಂಗಳೂರು: ಕಾಂಗ್ರೆಸ್ ನಂಬಿದರೆ ರಾಜ್ಯದ ಜನತೆಗೆ ಚೊಂಬು ಗ್ಯಾರಂಟಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಸರ್ಕಾರದ ವಿರುದ್ಧ ಸರಣಿ ಟ್ವಿಟ್ ಮಾಡಿರುವ ಅವರು, 5 ತಿಂಗಳಿಂದ ಅನ್ನಭಾಗ್ಯದ ಹಣ ಸಿಕ್ಕಿಲ್ಲ, ಇತ್ತ ಅಕ್ಕಿಯೂ ಕೊಡುತ್ತಿಲ್ಲ, ಗೃಹಲಕ್ಷ್ಮಿ ಹಣ 3 ತಿಂಗಳಿಂದ ಬಂದಿಲ್ಲ, ಗ್ಯಾರೆಂಟಿಗಳ ನೆಪದಲ್ಲಿ ಮತದಾರರನ್ನು ನಂಬಿಸಿ ಮೋಸ ಮಾಡಿ ಅಧಿಕಾರ ಹಿಡಿದ ನಯವಂಚಕ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಕೈಗೆ ದೊಡ್ಡ ಚೊಂಬು ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.
ಮತ್ತೊಂದು ಪೋಸ್ಟ್‌ನಲ್ಲಿ, ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಎರಡೆರಡು ಬಾರಿ ಎಡವಟ್ಟು ಮಾಡಿ ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿದೆ ಎಂದು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಜುಲೈ 2023ರಲ್ಲಿ ಎಇಇ ಹುದ್ದೆಗೆ ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿ 10 ಅಭ್ಯರ್ಥಿಗಳು ಒಎಂಆರ್ ಶೀಟ್ ತಿದ್ದಿ ಹುದ್ದೆಗಿಟ್ಟಿಸಿಕೊಂಡಿರುವ ಅಕ್ರಮ ಬೆಳಕಿಗೆ ಬಂದಿದ್ದು ಕಾಂಗ್ರೆಸ್ ಸರ್ಕಾರ ಕಾಸಿಗಾಗಿ ಹುದ್ದೆ ಮಾರಿಕೊಂಡಿರುವ ಅನುಮಾನ ಮೂಡುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ ಇರುವವರೆಗೂ ಪ್ರಾಮಾಣಿಕ ಅಭ್ಯರ್ಥಿಗಳು ಸರ್ಕಾರಿ ನೌಕರಿ ಪಡೆಯುವ ಆಸೆಯೇ ಇಟ್ಟುಕೊಳ್ಳುವಂತಿಲ್ಲ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.
ಇನ್ನೊಂದು ಟ್ವಿಟ್ ಮಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷಗಿರಿಗೆ ಟವಲ್ ಹಾಕಿ ಲಾಭಿ ಮಾಡುತ್ತಿರುವ ಸಚಿವ ಅವರು ತಮ್ಮ ಉಸ್ತುವಾರಿ ಜಿಲ್ಲೆಯಲ್ಲಿ ಅಕ್ಕಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ತಮಗೆ ಸಂಬಂಧವೇ ಇಲ್ಲ ಎನ್ನುವಂತೆ ಸೈಲೆಂಟ್ ಆಗಿದ್ದಾರೆ ಎಂದು ಟೀಕಿಸಿದ್ದಾರೆ.10 ಕೆಜಿ ಅಕ್ಕಿಯಂತೂ ಕೊಡಲಿಲ್ಲ. 5 ಕೆಜಿ ಅಕ್ಕಿಗೆ ನೀಡಬೇಕಾದ ಹಣವನ್ನೂ ಕೊಡುತ್ತಿಲ್ಲ. ಈಗ ಪ್ರಧಾನಿ ಮೋದಿ ಸರ್ಕಾರ ನೀಡುತ್ತಿರುವ 5ಕೆಜಿ ಅಕ್ಕಿಯನ್ನೂ ಕೊಡದೆ ಬಡವರ ಹೊಟ್ಟೆ ಹೊಡೆಯುವ ಕೆಲಸ ಮಾಡುತ್ತಿದೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಹೂಡಿಕೆ ಮಾಡಲು ಸಿದ್ಧವಿರುವ 30ಕ್ಕೂ ಹೆಚ್ಚು ಕಂಪನಿಗಳಿಗೆ ಭೂಮಿ ಒದಗಿಸಲು ನಿರ್ಲಕ್ಷ್ಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಹೂಡಿಕೆದಾರರು ರಾಜ್ಯದಿಂದ ವಿಮುಖರಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!