ಉದಯವಾಹಿನಿ ಶಿವಮೊಗ್ಗ: ಆತ್ಮನಿರ್ಭರ ಭಾರತ ಯೋಜನೆಯಡಿ ಬಂಡವಾಳ ಹೂಡಿ ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಹಾಗೂ ಉಕ್ಕಿನ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.ನಾಡಿನ ಪಾರಂಪರಿಕ ಹೆಗ್ಗುರುತು ಆದ ವಿಐಎಸ್‌ಎಲ್‌ ಮಧ್ಯ ಕರ್ನಾಟಕದ ಜೀವನಾಡಿ. ಅದನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ. ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆ ಕೈ ಬಿಡಿ ಎಂದು ಕೋರಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ, ‘ಭಾರತೀಯ ಉಕ್ಕು ಪ್ರಾಧಿಕಾರದ (ಎಸ್‌ಎಐಎಲ್) ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಾಧಕ-ಬಾಧಕಗಳನ್ನು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.ಇದಕ್ಕೂ ಮುನ್ನ ಬಿ.ವೈ.ರಾಘವೇಂದ್ರ, ವಿಐಎಸ್‌ಎಲ್‌ ಕಾರ್ಖಾನೆಯ ಮಾಲೀಕತ್ವ ಹೊಂದಿರುವ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.ಈ ಸಂದರ್ಭದಲ್ಲಿ ಭದ್ರಾವತಿ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜಗದೀಶ್ ಮತ್ತು ಪದಾಧಿಕಾರಿಗಳು, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ನೌಕರರ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಹಾಜರಿದ್ದರು.ಕಾರ್ಮಿಕರ ಸಂಘವು ಪ್ರತ್ಯೇಕವಾಗಿ ಮನವಿಯನ್ನು ಸಲ್ಲಿಸಿತು.

Leave a Reply

Your email address will not be published. Required fields are marked *

error: Content is protected !!