ಉದಯವಾಹಿನಿ, ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಇದೇ ಏಪ್ರಿಲ್ 15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲಾಗುವುದು ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದರು. ರಾಜ್ಯಾದ್ಯಂತ ಎಲ್ಲಾ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದ್ದು, ಗೂಡ್ಸ್ ವಾಹನಗಳು, ಏರ್ಪೋರ್ಟ್ ಟ್ಯಾಕ್ಸಿಗಳೂ ಸಹ ಸಂಪೂರ್ಣ ಬಂದ್ ಆಗಲಿದೆ ಎಂದು ಹೇಳಿದರು.
ಲಾರ ಮಾಲೀಕರ ಸಂಘದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೇಲ್ ಬೆಲೆ 7 ತಿಂಗಳಲ್ಲಿ 5 ರೂ ಏರಿಕೆಯಾಗಿದೆ. ಇದು ಲಾರಿ ಸೇರಿದಂತೆ ವಾಣಿಜ್ಯ ವಾಹನಗಳ ಮಾಲೀಕರು ನೇಣು ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಏನಾದರೂ ಫ್ರೀ ಕೊಡಲಿ, ಆದರೆ ಹೊಟ್ಟೆ ಮೇಲೆ ಹೊಡೆದು ದರ ಏರಿಕೆ ಮಾಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಫಿಟ್ನೆಸ್ ಫೀಸ್, ಬಾರ್ಡರ್ ಚೆಕ್ ಪೋಸ್ಟ್, ಡಿಸೇಲ್ ದರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. 14ನೇ ತಾರೀಖು ಅಂಬೇಡ್ಕರ್ ಜಯಂತಿ ರಾತ್ರಿಯಿಂದಲೇ ಹೋರಾಟ ಶುರು ಮಾಡಲಿದ್ದೇವೆ. ಬೇಡಿಕೆ ಈಡೇರುವವರೆಗೆ ಕರ್ನಾಟಕದ ಒಳಗೆ ಯಾರೂ ಬರಲ್ಲ. ಇದಕ್ಕೆ ಪೆಟ್ರೋಲ್ ಮಾಲೀಕರು ಬೆಂಬಲಕೊಟ್ಟಿದ್ದಾರೆ ಎಂದರು.
ಏರ್ಪೋಟ್ ಟ್ಯಾಕ್ಸಿ, ಜಲ್ಲಿ ಮರಳು, ಸೇರಿದಂತೆ ಗೂಡ್ಸ್ ವಾಹನಗಳು ಬಂದ್ ಆಗಲಿವೆ. ಎಲ್ಲಾ ಬಗೆಯ ವಾಣಿಜ್ಯ ವಾಹನಗಳ 9 ಲಕ್ಷ ವಾಹನಗಳು ಸ್ಥಗಿತಗೊಳ್ಳಲಿವೆ ಎಂದು ತಿಳಿಸಿದರು.
ಏ.14ರ ವರೆಗೆ ಸರ್ಕಾರಕ್ಕೆ ಗಡುವು ನೀಡುತ್ತೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಮಣಿಯದಿದ್ದರೆ, 14ರ ರಾತ್ರಿಯಿಂದಲೇ ಹೋರಾಟ ಆರಂಭಿಸುತ್ತೇವೆ ಹೋರಾಟ ಆರಂಭವಾದ ಬಳಿಕ ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡಲ್ಲ. ಚೆಕ್ ಪೋಸ್ಟ್ಗಳಲ್ಲಿ ಖುದ್ದು ನಾವುಗಳೇ ನಿಲ್ಲುತ್ತೇವೆ. ಯಾವುದೇ ವಾಣಿಜ್ಯ ವಾಹನಗಳನ್ನು ಒಳಗಡೆ ಬಿಡದಂತೆ ನೋಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
