ಉದಯವಾಹಿನಿ, ಬೆಂಗಳೂರು: ಹಿಂದುಳಿದ ವರ್ಗಗಳ ಕಾಶ್ವತ ಆಯೋಗದ ವರದಿ ಆಧರಿಸಿ ಯಾರ ಹಕ್ಕುಗಳನ್ನೂ ಕಸಿಯುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೀಸಲಾತಿ ಪರಿಷ್ಕರಣೆ ಮಾಡಬೇಕು ಎಂದು ವರದಿಯಲ್ಲಿ ಶಿಫಾರಸು ನೀಡಿದರೆ ಅದನ್ನು ಅಧ್ಯಯನ ನಡೆಸಲಾಗುವುದು, ಸದ್ಯದ ಪರಿಸ್ಥಿತಿಯಲ್ಲಿ ಜನಸಂಖ್ಯೆ ಸ್ಫೋಟವಾಗುತ್ತಿದೆ. ಹೀಗಾಗಿ ಎಲ್ಲರಿಗೂ ಅವಕಾಶಗಳು ಸಿಗಬೇಕು. ಆ ನಿಟ್ಟಿನಲ್ಲಿ ವೈಜ್ಞಾನಿಕ ಕ್ರಮದಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದರು. 2015ರಲ್ಲಿ ಸುಮಾರು 200 ಕೋಟಿ ರೂ. ಖರ್ಚು ಮಾಡಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲಾಗಿದೆ. ಅದರಲ್ಲಿ ಜಾತಿಯ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸಮಾಜದ ಬದಲಾವಣೆ ಕುರಿತು ಈ ಸಮೀಕ್ಷೆ ನಡೆಸಿದ್ದು, ಅದನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದರು.
ಕಾಂಗ್ರೆಸ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ಜಾತಿ ಜನಗಣತಿ ಆಗಬೇಕೆಂದು ಹೇಳಿತ್ತು. ಭಾರತದ ಜನಗಣತಿಯಲ್ಲಿ ಜಾತಿ ಮಾಹಿತಿ ಸಂಗ್ರಹಿಸಲು ಪ್ರಯತ್ನಗಳಾಗಿತ್ತು. ಅದನ್ನು ಪಟ್ಟಭದ್ರ ಹಿತಾಸಕ್ತಿಗಳು ಎಂದು ಆರೋಪಿಸಿದ್ದರು. ಎಸ್ಸಿ/ಎಸ್ಟಿಗೆ ರಾಜ್ಯಾಂಗ ಬದ್ಧವಾಗಿ ಮೀಸಲಾತಿ ಇದೆ. ಪ್ರವರ್ಗಗಳಿಗೆ ಮೀಸಲಾತಿ ನೀಡುವ ಬಗ್ಗೆ ಚರ್ಚೆಯಾಗಬೇಕು ಎಂದು ಹೇಳಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ಜಾತಿ ಜನಗಣತಿಯಾಗಿತ್ತು. ಸ್ವಾತಂತ್ರ್ಯ ಬಂದ ನಂತರ ದೇಶದ ಜನಸಂಖ್ಯೆ 35 ಕೋಟಿ ಇತ್ತು. ಈಗ 140 ಕೋಟಿಯಾಗಿದೆ. ಅದಕ್ಕೆ ಅನುಗುಣವಾಗಿ ಅಸಮಾನತೆಯನ್ನು ತೊಡೆದುಹಾಕಿ ಸಮಸಮಾಜ ನಿರ್ಮಾಣ ಮಾಡಲು ಈ ರೀತಿಯ ಅಧ್ಯಯನ ಅಗತ್ಯವಿತ್ತು ಎಂದರು. ಕೇಂದ್ರ ಮತ್ತು ರಾಜ್ಯಸರ್ಕಾರಗಳು ಹಿಂದುಳಿದ ಸಮುದಾಯಗಳ ಸುಧಾರಣೆಗಾಗಿ ಅಗತ್ಯ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಹಿಂದುಳಿದ ವರ್ಗಗಳ ವರದಿ ಯಾರ ಪರ ಅಥವಾ ವಿರುದ್ಧವೂ ಇಲ್ಲ. ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲಾಗಿದೆ. ಇದು ಅತ್ಯಂತ ಪ್ರಗತಿಪರವಾದ ವರದಿ ಆಯೋಗದ ವರದಿಯಲ್ಲಿ ಹಲವಾರು ಶಿಫಾರಸುಗಳನ್ನು ನೀಡಲಾಗಿದೆ. ಜನಸಂಖ್ಯೆ ಹೆಚ್ಚಳ, ಸ್ಥಿತಿಗತಿಗಳ ಕುರಿತು ಅಧ್ಯಯನ ನಡೆಯಲಿದೆ ಎಂದು ಹೇಳಿದರು.
