ಉದಯವಾಹಿನಿ, ಕೋಲ್ಕತ್ತ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನ ಮೇಳ ನಡೆದ ಹಿಂಸಾಚಾರದ ಬಳಿಕ ಪಶ್ಚಿಮ ಬಂಗಾಳದ ಮುರ್ಷಿದಾಬಾದ `ನಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸುವಂತೆ ಕೊಲ್ಕತ್ತ ಹೈಕೋರ್ಟ್ ಆದೇಶವನ್ನು ನೀಡಿದೆ. ಮುರ್ಷಿದಾಬಾದ್ನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಸುಮಾರು 300 ಬಿಎಸ್ಎಫ್ ಸಿಬ್ಬಂದಿಗಳ ಜೊತೆಗೆ ಐದು ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲಾಗಿದೆ. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ( ಎಂಎಚ್ ಎ) ಹೇಳಿಕೆಯಲ್ಲಿ ತಿಳಿಸಿದೆ. ನ್ಯಾಯಮೂರ್ತಿಗಳಾದ ಸೌಮನ್ ಸೇನ್ ಮತ್ತು ರಾಜಾ ಬಸು ಚೌಧರಿ ಅವರ ಪೀಠ, ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಸಮರ್ಪಕವಾಗಿಲ್ಲ, ಗಲಭೆಕೋರರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಣ್ಣು ಮುಚ್ಚಿ ಕೂತಿರಲು ಸಾಧ್ಯವಿಲ್ಲ. ನಾಗರಿಕರಿಗೆ ಸೂಕ್ತ ಭದ್ರತೆ ಮತ್ತು ರಕ್ಷಣೆ ನೀಡಬೇಕಾದ್ದು ಸರ್ಕಾರದ ಕರ್ತವ್ಯ. ಈ ಪ್ರದೇಶದಲ್ಲಿ ಶಾಂತಿ ನೆಲಿಸುವಂತೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಹಿಂಸಾಚಾರವನ್ನು ತಡೆಯಲು ಕೇಂದ್ರ ಸಶಸ್ತ್ರ ಪಡೆಗಳ ನಿಯೋಜನೆಗೆ ಆಗ್ರಹಿಸಿತ್ತು. ಅರ್ಜಿಯು ರಾಜಕೀಯ ಪ್ರೇರಿತ ಅರ್ಜಿ ಎಂದು ವಾದಿಸಿದ ರಾಜ್ಯ ಸರ್ಕಾರ, ಹಿಂಸಾಚಾರವನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ. ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರ ಮುರ್ಷಿದಾಬಾದ್ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸತಿ, ಧುಲಿಯನ್, ಸಂಸರ್ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಆದಾಗ್ಯೂ ಹಿಂಸಾಚಾರ ಪೀಡಿತ ಮುರ್ಷಿದಾಬಾದ್ನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಸುಮಾರು 300 ಬಿಎಸ್ಎಫ್ ಸಿಬ್ಬಂದಿಯಲ್ಲದೆ, ಪಶ್ಚಿಮ ಬಂಗಾಳ ಸರ್ಕಾರದ ಕೋರಿಕೆಯ ಮೇರೆಗೆ ಇನ್ನೂ ಕಂಪನಿಗಳನ್ನು ನಿಯೋಜಿಸಲಾಗಿದೆ.
