ಉದಯವಾಹಿನಿ, ಬೆಂಗಳೂರು: ದುಬಾರಿ ಶ್ವಾನಗಳ ಖರೀದಿ ಮಾಡಿರುವುದಾಗಿ ಹೇಳಿದ್ದ ಬೆಂಗಳೂರು ಮೂಲದ ಶ್ವಾನಪ್ರೇಮಿ ಸತೀಶ್ ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದು, ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಹೌದು.. 50 ಕೋಟಿ ರೂಪಾಯಿ ಕೊಟ್ಟು ವಿಶ್ವದಲ್ಲೇ ದುಬಾರಿಯಾಗಿರುವ ಶ್ವಾನ ನಾಯಿಯೊಂದನ್ನು ಖರೀದಿ ಮಾಡಿದ್ದೇನೆ ಎಂದು ಹೇಳುತ್ತಿದ್ದ ಬೆಂಗಳೂರಿನ ಶ್ವಾನಪ್ರೇಮಿ ಸತೀಶ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೆಪಿ ನಗರದ ಮೂರನೇ ಹಂತದಲ್ಲಿರುವ ಸತೀಶ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಪರಿಶೀಲನೆ ವೇಳೆ ಸತೀಶ್ 50 ಕೋಟಿ ರೂಗೆ ನಾಯಿ ಖರೀದಿ ಮಾಡಿದ್ದಾರೆ ಎಂಬುದು ಸುಳ್ಳು ಎಂಬುದು ತಿಳಿದುಬಂದಿದೆ. ಸದ್ಯ ಇಡಿ ಅಧಿಕಾರಿಗಳು ಸತೀಶ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಇದೇ ಸತೀಶ್, 49 ಕೋಟಿ (4.4 ಮಿಲಿಯನ್ ಪೌಂಡ್ಗಳು) ರೂ.ಗೆ ಅತ್ಯಂತ ಅಪರೂಪದ ತೋಳ ನಾಯಿಯನ್ನು (ವುಲ್ಫ್ ಡಾಗ್) ಖರೀದಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಕಾಡು ತೋಳ ಮತ್ತು ಕಾಕೇಶಿಯನ್ ಶೆಫರ್ಡ್ ತಳಿಗಳ ಮಿಶ್ರಣವಾಗಿದ್ದ ಕಡಬಾಮ್ ಒಕಾಮಿ ಎಂದು ಕರೆಯಲ್ಪಡುವ ಈ ಅಪರೂಪದ ನಾಯಿಯನ್ನು ಖರೀದಿಸಲು ಸುಮಾರು ರೂ.50 ಕೋಟಿ ಖರ್ಚು ಮಾಡಿದ್ದಾಗಿ ಹೇಳಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ 50 ಕೋಟಿ ರೂ,ಗೆ ಒಂದು ನಾಯಿ ಖರೀದಿ ಮಾಡಿದ್ದೇನೆ ಎಂದು ಸತೀಶ್ ಹೇಳಿಕೊಂಡಿರುವುದು ಸುಳ್ಳು ಎಂದು ಕೆಲವರು ಟೀಕಿಸಿದ್ದರು. ಈ 50 ಕೋಟಿ ರೂ ಮೌಲ್ಯದ ನಾಯಿ ಖರೀದಿ ವಿಚಾರವೇ ಇಡಿ ಅಧಿಕಾರಿಗಳು ಅವನತ್ತ ತಿರುಗುವಂತೆ ಮಾಡಿತ್ತು. ಇದೇ ವಿಚಾರವಾಗಿ ಸತೀಶ್ ವಿರುದ್ಧ ಇಡಿ ಪ್ರಕರಣವನ್ನೂ ಕೂಡ ದಾಖಲಿಸಿಕೊಂಡಿತ್ತು. ಆದರೆ ಇದೀಗ ಇಡಿ ಸತೀಶ್ ಮನೆ ಮೇಲೆ ದಾಳಿ ಮಾಡಿದೆ.
