ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಪೂರ್ವ ಮುಂಗಾರು ಚುರುಕಾಗಿದ್ದು, ತಡರಾತ್ರಿ ಸುರಿದ ಮಳೆಗೆ ಭಾರೀ ಅನಾಹುತ ಸೃಷ್ಟಿಸಿದೆ.ರಾಮನಗರ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಮಾಗಡಿ ಪಟ್ಟಣದ ನಟರಾಜ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ರಾತ್ರಿಯಿಡೀ ಸಾರ್ವಜನಿಕರು ಜಾಗರಣೆ ಮಾಡುವಂತಾಯಿತು.ಮನೆಯಲ್ಲಿ ಸಂಗ್ರಹವಾಗಿದ್ದ ನೀರನ್ನು ಹೊರಗೆ ಹಾಕುವಲ್ಲಿ ನಿವಾಸಿಗಳು ಪರದಾಡುವಂತಾಯಿತು.ಬಿರುಗಾಳಿ ಮಳೆಗೆ ಬಿಡದಿ ಬಳಿ ಜಾಹೀರಾತು ಕಮಾನೊಂದು ಉರುಳಿಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಗಳೂರು-ಮೈಸೂರು ಹಳೆ ರಸ್ತೆಯ ಅವ್ವರಹಳ್ಳಿಯಲ್ಲಿ ಇತ್ತೀಚೆಗೆ ಅಳವಡಿಸಲಾಗಿದ್ದ ಕಮಾನು ರಾತ್ರಿ ಸುರಿದ ಗಾಳಿಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿದೆ. ವಾಹನಗಳ ಸಂಚಾರ ಕಡಿಮೆ ಇದ್ದುದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.ಉತ್ತರ ಕರ್ನಾಟಕ ಭಾಗದಲ್ಲೂ ಸಹ ಮಳೆ ಆರ್ಭಟ ಜೋರಾಗಿದ್ದು, ಬಾಗಲಕೋಟೆ ಜಿಲ್ಲೆಯ ಕಟಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ, ಕಲಬುರಗಿ ನಗರ ಹಾಗೂ ಬೀದರ್‌ ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆಯಾಗಿದೆ. ಹುಬ್ಬಳ್ಳಿಯಿಂದ ಬ್ಯಾಹಟ್ಟಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿ ಹಳ್ಳ ತುಂಬಿಹರಿದಿದ್ದು, ಗ್ರಾಮಸ್ಥರು ಹಳ್ಳ ದಾಟಲು ಪರದಾಡುವಂತಾಯಿತು.

Leave a Reply

Your email address will not be published. Required fields are marked *

error: Content is protected !!