ಉದಯವಾಹಿನಿ, ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಳಿತ ಮಂಡಳಿ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಈಗಾಗಲೇ ಕರ್ನಾಟಕ ಸರ್ಕಾರ ತಲಾ 10 ಲಕ್ಷ ರೂ. ಘೋಷಣೆ ಮಾಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಆಡಳಿತ ಮಂಡಳಿ ತಲಾ 10 ಲಕ್ಷ ರೂ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಹೀಗಾಗಿ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಸಿಗಲಿದೆ. ಜೊತೆಗೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಚಿಕಿತ್ಸಾ ವೆಚ್ಚವನ್ನೂ ಭರಿಸುವುದಾಗಿ ಹೇಳಿದೆ.
ಈ ಕುರಿತು ಆರ್ಸಿಬಿ ಮಂಡಳಿ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನಲ್ಲಿ ನಡೆದ ಘಟನೆ ನಿಜಕ್ಕೂ ದುರದೃಷ್ಟಕರ. ಆರ್ಸಿಬಿ ಕುಟುಂಬಕ್ಕೆ ಅತೀವವಾದ ನೋವುಂಟು ಮಾಡಿದೆ. ಆರ್ಸಿಬಿ ಮೃತರ 11 ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಆರ್ಥಿಕ ಸಹಾಯ ಘೋಷಿಸಿದೆ. ಇದಲ್ಲದೇ ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳಿಗೆ ಸಹಕರಿಸಲು ಆಸಿಬಿ ಕೇರ್ಸ್ ಎಂಬ ನಿಧಿಯನ್ನೂ ಸಹ ರಚಿಸಲಾಗುತ್ತಿದೆ. ನಾವು ಮಾಡುವ ಎಲ್ಲ ಒಳ್ಳೆಯದರಲ್ಲಿ, ನಮ್ಮ ಹೃದಯದಲ್ಲಿ ಯಾವಾಗಲೂ ಅಭಿಮಾನಿಗಳಿರುತ್ತಾರೆ. ದುಃಖದಲ್ಲಿಯೂ ನಾವು ಅವರೊಟ್ಟಿಗಿರುತ್ತೇವೆ ಎಂದು ಭಾವುಕ ಸಂದೇಶವನ್ನು ಹಂಚಿಕೊಂಡಿದೆ.
