ಉದಯವಾಹಿನಿ, ಮಂಗಳೂರು: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್‌‍ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟು 18ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನೆಲ್ಯಾಡಿ ಬಳಿ ಸಂಭವಿಸಿದೆ. ಕಾರ್ಕಳದ ಪಡುಮನೆ ನಿವಾಸಿ ಶಂಕರನಾರಾಯಣಭಟ್‌ (41) ಮೃತಪಟ್ಟವರು.
ಕಾರ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್‌‍ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲಾವತಡ್ಕ ಬಳಿ ರಸ್ತೆಬದಿ ನಿಂತಿದ್ದ ಹಿಟಾಚಿ ಯಂತ್ರ ಲೋಡ್‌ ಮಾಡಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್‌‍ ಮುಂಭಾಗ ಕುಳಿತಿದ್ದ ಶಂಕರನಾರಾಯಣಭಟ್‌ ಅವರು ಗಂಭೀರ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರ ಪೈಕಿ ಗಂಭೀರ ಗಾಯಗೊಂಡಿರುವ ಐದು ಮಂದಿಯನ್ನು ಮಂಗಳೂರಿನ ಎಜೆ ಆಸ್ಪತ್ರೆ ಹಾಗೂ ನಾಲ್ಕು ಮಂದಿಯನ್ನು ಇಂಡಿಯನ್‌ ಆಸ್ಪತ್ರೆಗಳಿಗೆ ಹಾಗೂ ಇನ್ನೂ ಕೆಲವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಪಘಾತದ ಸುದ್ದಿ ತಿಳಿದು ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬಸ್‌‍ನ ಮುಂಭಾಗ ಭಾಗಶಃ ಹಾನಿಯಾಗಿದೆ.

 

Leave a Reply

Your email address will not be published. Required fields are marked *

error: Content is protected !!