ಉದಯವಾಹಿನಿ, ತುಮಕೂರು: ಜೂಜು ಅಡ್ಡೆ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡಿದ್ದಕ್ಕೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಠಾಣೆಯ ಪೊಲೀಸರು ವಿಶೇಷ ಚೇತನ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಚೌಲಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚೌಲಿಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟದ ಬಗ್ಗೆ ರಘು ಅವರು ತಿಪಟೂರು ಸರ್ಕಲ್ ಇನ್ಸ್ಪೆಕ್ಟರ್ಗೆ ಮಾಹಿತಿ ನೀಡಿದ್ದರು. ಈ ಕಾರಣದಿಂದ ಹೊನ್ನವಳ್ಳಿ ಠಾಣೆ ಎಸ್ಐ ರಾಜೇಶ್, ಸಿಬ್ಬಂದಿ ಯೋಗೀಶ್ ವಿಶೇಷ ಚೇತನರಾದ ರಘು ಅವರ ಮನೆಗೆ ನುಗ್ಗಿ ಬೂಟ್ ಕಾಲಿನಿಂದ ಒದ್ದು, ನಿಂದಿಸಿ ಹಲ್ಲೆ ಮಾಡಿದ್ದಾರೆ.
ಈ ವೇಳೆ ತಡೆಯಲು ಬಂದ ಕುಟುಂಬದ ಮಹಿಳೆಯರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ರಘು ತಾಯಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಅವರಿಗೆ ದೂರು ನೀಡಿದ್ದಾರೆ. ಎಸ್ಐ ರಾಜೇಶ್, ಸಿಬ್ಬಂದಿ ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೊಲೀಸರ ಹಲ್ಲೆಯಿಂದ ರಘು ಬಲಗಾಲು ಮುರಿದಿದ್ದು, ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
