ಉದಯವಾಹಿನಿ, ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಇಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಭೂಕುಸಿತ, ಕಡಲು ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು 800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದರು.
ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ತಡೆಗೋಡೆ ನಿರ್ಮಿಸುವ ಕೆಲಸ ನಡೆಯಬೇಕಿದೆ. ಇದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗುತ್ತಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲು ಕೊರೆತ ಸಮಸ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೂರು ಕೋಟಿಯಂತೆ 300 ಕೋಟಿ ರೂ. ಒದಗಿಸಲಾಗುವುದು. ತಡೆಗೋಡೆ ನಿರ್ಮಾಣ ಸೇರಿದಂತೆ ಪ್ರಕೃತಿ ವಿಕೋಪ ತಡೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆಯಾಗಲು ವಿಳಂಬವಾಗಿದೆ. ಈ ಕುರಿತಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದ ಅನುದಾನ ಬಿಡುಗಡೆ ವಿಳಂಬವಾಗಿರುವುದರಿಂದ ತಡೆಗೋಡೆ ಹಾಗೂ ಪ್ರಕೃತಿ ವಿಕೋಪದ ಕಾಮಗಾರಿ ನಡೆಸಲು ವಿಳಂಬವಾಗಿದೆ ಎಂದು ಹೇಳಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿನ 136ಕ್ಕೂ ಹೆಚ್ಚು ಮಳೆಮಾಪನ ಯಂತ್ರಗಳು ಹಾಳಾಗಿದೆ. ರಾಜ್ಯದ ಸುಮಾರು 1,500 ಸ್ಥಳಗಳಲ್ಲಿ ಮಳೆ ಮಾಪನ ಕೇಂದ್ರಗಳು ದುಸ್ಥಿತಿಯಲ್ಲಿವೆ. ಅವುಗಳನ್ನು ದುರಸ್ತಿ ಮಾಡಿಸುವ ಕೆಲಸ ನಡೆಯಲಿದೆ. ಯಂತ್ರಗಳು ಸಂಪೂರ್ಣ ಹಾಳಾಗಿದ್ದರೆ ಹೊಸ ಯಂತ್ರಗಳ ಅಳವಡಿಕೆ ನಡೆಯಲಿದೆ ಎಂದರು.
