ಉದಯವಾಹಿನಿ, ಬೆಂಗಳೂರು : ನೈಋತ್ಯ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಇನ್ನೊಂದು ವಾರ ಮುಂದುವರೆಯುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಒಳನಾಡಿನಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ.ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಶಿವಮೊಗ್ಗ ಜಿಲ್ಲೆಯ ಆಗುಂಬೆ-22.5 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಕ್ಯಾಸ್ಟಲ್‌ ರಾಕ್‌- 218.4 ಮಿ.ಮೀ., ಶೃಂಗೇರಿ- 137ಮಿ.ಮೀ., ಸೋಮವಾರ ಪೇಟೆ-117.4 ಮಿ.ಮೀ., ಬಾಗಮಂಡಲ-117.2ಮಿ.ಮೀ., ಜಯಪುರ-104.8 ಮಿ.ಮೀ. ನಷ್ಟು ಭಾರಿ ಮಳೆಯಾಗಿದೆ.
ಕೊಟ್ಟಿಗೆಹಾರ–92.4 ಮಿ.ಮೀ., ಸಿದ್ದಾಪುರ -91.2 ಮಿ.ಮೀ, ಕೊಪ್ಪ-85ಮಿ.ಮೀ., ಬಾಳೆಹೊನ್ನೂರು-83.2 ಮಿ.ಮೀ, ಧರ್ಮಸ್ಥಳ-81, ನಾಪೋಕ್ಲು-80 ಮಿ.ಮೀ, ಪುತ್ತೂರು -73 ಮಿ.ಮೀ., ಗೇರುಸೊಪ್ಪ- 71 ಮಿ.ಮೀ.ನಷ್ಟು ಅಧಿಕ ಪ್ರಮಾಣದ ಮಳೆಯಾಗಿದೆ.
ಕರಾವಳಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.

ರಾಜ್ಯದಲ್ಲಿ ಬಹುತೇಕ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ತಂಪಾದ ಮೇಲೈ ಗಾಳಿ ಬೀಸಲಿದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಆದರೆ, ನಾಳೆಯಿಂದ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ಭಾರಿ ಮಳೆ ಮುಂದುವರೆಯುವ ಸೂಚನೆಗಳಿಲ್ಲ.ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಟ್ರಫ್‌ನ ಪರಿಣಾಮದಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಶನಿವಾರದವರೆಗೂ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹವಾಮಾನ ಇಲಾಖೆ ಬಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್‌‍.ಪಾಟೀಲ್‌ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!