ಉದಯವಾಹಿನಿ, ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧಿಕೃತ ಫೇಸ್ಬುಕ್ ಪೇಜ್ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಬಗ್ಗೆ ಅವಹೇಳನಕಾರಿಯಾಗಿ ಏಕವಚನದಲ್ಲಿ ಸಂಬೋಧಿಸಿ ಬರೆದಿದ್ದಾರೆ ಎಂದು ಆರೋಪಿಸಿ ಪೊಲೀಸ್ ಆಯುಕ್ತರಿಗೆ ಬಿಜೆಪಿ ದೂರು ನೀಡಿದೆ. ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರ ನೇತೃತ್ವದ ನಿಯೋಗವು ಬುಧವಾರ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ದೂರು ಸಲ್ಲಿಸಿದರು. ರಾಜಕೀಯ ಭಿನ್ನಾಭಿಪ್ರಾಯ ಸಹಜ ಆದರೆ, ದ್ವೇಷದಿಂದ ಒಬ್ಬ ವ್ಯಕ್ತಿಯ ತೇಜೋವಧೆ ಮಾಡುವ ಕಾಂಗ್ರೆಸ್ ಪಕ್ಷದ ಪ್ರಯತ್ನ ಖಂಡನೀಯ.
ಬಹುತೇಕ ಸಂದರ್ಭದಲ್ಲಿ ಅವರ ಜಾತಿಯನ್ನು ಮುಂದಿಟ್ಟು, ಮತ್ತೊಂದು ಜಾತಿಯನ್ನು ಎತ್ತಿಕಟ್ಟಿ ಪದೇಪದೇ ಟೀಕಿಸಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಾರಣವಾಗುತ್ತಿದೆ. ಸುಳ್ಳು ಸುದ್ದಿ ಹರಡುವುದರ ವಿರುದ್ಧ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ ಎಂದು ಸ್ವತಃ ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾರ್ಟಿಯು ಮಾಡಿರುವ ಸಾಮಾಜಿಕ ಜಾಲತಾಣದ ಸುಳ್ಳು ಸಂಗತಿಗಳ ವಿವರವನ್ನು ತಮ್ಮ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.
