ಉದಯವಾಹಿನಿ, 2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಘೋಷಣೆ ಮಾಡಲಾಯಿತು. 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳ ಪಟ್ಟಿಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಕೂಡ ಸ್ಥಾನ ಪಡೆದುಕೊಂಡಿದೆ. ಈ ಸಿನಿಮಾದ ನಿರ್ದೇಶನಕ್ಕಾಗಿ ಸುದೀಪ್ತೋ ಸೇನ್ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ನೀಡಲಾಗಿದೆ. ಈ ಸಿನಿಮಾದ ಛಾಯಾಗ್ರಹಣಕ್ಕೆ ಕೂಡ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ವಿವಾದಾತ್ಮಕ ಅಂಶ ಇದೆ ಎಂಬ ಕಾರಣಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ನೀಡಿದನ್ನು ಹಲವರು ಖಂಡಿಸಿದ್ದಾರೆ. ಈ ನಡುವೆ ನಿರ್ದೇಶಕ ಸುದೀಪ್ತೋ ಸೇನ್ ಅವರು ಒಂದು ಹೇಳಿಕೆ ನೀಡಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸುದೀಪ್ತೋ ಸೇನ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ತಮ್ಮ ಸಿನಿಮಾದ ತಾಂತ್ರಿಕ ಬಳಗದಲ್ಲಿ ಕೆಲಸ ಮಾಡಿದವರ ಬಗ್ಗೆ ಸುದೀಪ್ತೋ ಸೇನ್ ಅವರಿಗೆ ಹೆಮ್ಮೆ ಇದೆ. ಈ ಚಿತ್ರದ ಹಲವು ತಂತ್ರಜ್ಞರಿಗೆ ರಾಷ್ಟ್ರ ಪ್ರಶಸ್ತಿ ಬರಬೇಕಿತ್ತು ಎಂದು ಅವರು ಹೇಳಿದ್ದಾರೆ. ಅಲ್ಲದೇ, ಸಿನಿಮಾ ನಟಿ ಅದಾ ಶರ್ಮಾ ಅವರಿಗೆ ‘ಅತ್ತುತ್ತಮ ನಟಿ’ ಪ್ರಶಸ್ತಿ ಸಿಕ್ಕಿಲ್ಲ ಎಂಬುದಕ್ಕೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
‘ದಿ ಕೇರಳ ಸ್ಟೋರಿ’ ಚಿತ್ರವು ಕೇರಳ ರಾಜ್ಯವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸಿದೆ ಎಂಬುದು ಹಲವರ ವಾದ. ಆ ಕಾರಣದಿಂದಲೇ ಕೇರಳದ ಅನೇಕರು ಈ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ‘ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ನೀಡಿದ್ದು ಭಾರತೀಯ ಸಿನಿಮಾ ಪರಂಪರೆಗೆ ಮಾಡಿದ ಅವಮಾನ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
