ಉದಯವಾಹಿನಿ, ರಾಯಚೂರು: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಆ.8ರಿಂದ 14ರವರೆಗೆ 7 ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದ್ದಾರೆ. ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು, 8ರಂದು ಧ್ವಜಾರೋಹಣ ಕಾರ್ಯಕ್ರಮ ಮೂಲಕ ಆರಾಧನಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಆಗಸ್ಟ್ 10ಕ್ಕೆ ಪೂರ್ವಾರಾಧನೆ, 11ಕ್ಕೆ ಮಧ್ಯಾರಾಧನೆ, 12ಕ್ಕೆ ಉತ್ತರಾಧನೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಆಗಸ್ಟ್ 8ರಂದು ಪ್ರತಿವರ್ಷದಂತೆ ತಿರುಮಲ ತಿರುಪತಿ ದೇವಸ್ಥಾನದಿಂದ ಬರುವ ಶ್ರೀನಿವಾಸ ದೇವರ ಶೇಷವಸ್ತ್ರವನ್ನ ರಾಯರ ಮೂಲ ಬೃಂದಾವನಕ್ಕೆ ಸಮರ್ಪಿಸಲಾಗುವುದು. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಆಗಸ್ಟ್ 10ರಂದು ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದಿದ್ದಾರೆ. ಆಗಸ್ಟ್ 12ರಂದು ಬೆಳಿಗ್ಗೆ 10 ಗಂಟೆಗೆ ಶ್ರೀಮಠದ ಮುಂದಿನ ರಾಜಬೀದಿಯಲ್ಲಿ ಮಹಾರಥೋತ್ಸವ ನಡೆಯಲಿದೆ. ಇದೇ ವೇಳೆ ರಾಯರ ಮೂಲ ಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ ಮಾಡಲಾಗುವುದು. ಮಹಾ ರಥೋತ್ಸವ ವೇಳೆ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪ ವೃಷ್ಠಿ ನಡೆಸಲಾಗುವುದು. ವಿವಿಧ ಕ್ಷೇತ್ರದ ಗಣ್ಯವ್ಯಕ್ತಿಗಳು, ವಿದ್ವಾಂಸರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
