ಉದಯವಾಹಿನಿ, ನವದೆಹಲಿ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಮಾಡಿರುವ ಅವರು, ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ ಸುಮಾರು 318 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಿದ್ದು, ಯೋಜನೆಯ ಡಿಪಿಆರ್ ಸಲ್ಲಿಕೆಯಾಗಿದೆ ಹಾಗೂ ಭೂ ಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಪ್ರಸ್ತುತ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ ರಾಜ್ಯ ಸರ್ಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇನ್ನೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೂ ಯಾವುದೇ ಕೆಲಸ ಮಾಡುತ್ತಿಲ್ಲ. ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಕಾಮಗಾರಿ ಆರಂಭಿಸುವಂತೆ ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!