ಉದಯವಾಹಿನಿ, ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ, ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ, ರಸಗೊಬ್ಬರದ ಅಭಾವ, ಒಳ ಮೀಸಲಾತಿ, ಮತಗಳ್ಳತನದ ಆರೋಪ ಸೇರಿದಂತೆ ಹಲವು ವಿಚಾರಗಳು ಸೋಮವಾರದಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಉಭಯಸದನಗಳ ಮಳೆಗಾಲ ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ. ಪ್ರಮುಖವಾಗಿ ಈ ವಿಚಾರಗಳು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಎಡೆಮಾಡಿಕೊಡಲಿವೆ.ಸದನದ ಹೊರಗೆ ಈ ವಿಚಾರಗಳ ಬಗ್ಗೆ ಹಲವು ಬಾರಿ ಆರೋಪ-ಪ್ರತ್ಯಾರೋಪಗಳು ನಡೆದಿದ್ದು, ಸದನದಲ್ಲೂ ಪ್ರತಿಧ್ವನಿಸಲಿವೆ. ಆ.11 ರಿಂದ 22 ರವರೆಗೆ 9 ದಿನಗಳ ಕಾಲ ಅಧಿವೇಶನ ನಿಗದಿಯಾಗಿದೆ.ಸೋಮವಾರ ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳಲಿದ್ದು, ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಸಲ್ಲಿಸಲಾಗುತ್ತದೆ.ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತುಗೊಳಿಸಲಾಗಿತ್ತು. ಈ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿತ್ತು. ಈ ಕುರಿತಾದ ಸ್ಥಿರೀಕರಣ ಪ್ರಸ್ತಾವ ಮೊದಲ ದಿನವೇ ಮಂಡನೆಯಾಗಲಿದ್ದು, ವಿಧಾನಸಭೆ ಅನುಮೋದನೆ ನೀಡಬೇಕಿದೆ.
ಉಳಿದಂತೆ ಪ್ರಶ್ನೋತ್ತರ ಗಮನ ಸೆಳೆಯುವ ಸೂಚನೆಗಳು, ಕಾಗದ ಪತ್ರಗಳ ಮಂಡನೆ ಸೇರಿದಂತೆ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು ಜರುಗಲಿವೆ.2025ನೇ ಸಾಲಿನ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು ವಿಧೇಯಕ, ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ ವಿಧೇಯಕ), ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ ವಿಧೇಯಕ) ಸೇರಿದಂತೆ 18 ಕ್ಕೂ ಹೆಚ್ಚು ಪ್ರಮುಖ ವಿಧೇಯಕಗಳು ಉಭಯ ಸದನಗಳಲ್ಲಿ ಮಂಡನೆಯಾಗಲಿವೆ.ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಸಗೊಬ್ಬರದ ಅಭಾವ ಉಂಟಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಎಡೆಮಾಡಿಕೊಟ್ಟಿದೆ. ಈ ವಿಚಾರದ ಬಗ್ಗೆ ಈಗಾಗಲೇ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಪ್ರತಿಭಟನೆ ನಡೆಸಿದ್ದು, ಸದನದಲ್ಲೂ ಪ್ರಮುಖವಾಗಿ ಪ್ರಸ್ತಾಪಿಸಲಿದೆ. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಕಾವೇರಿದ ವಾಗ್ವಾದಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಹೆಚ್ಚಾಗಿದೆ.
ಮುಂಗಾರು ಮಳೆ ರಾಜ್ಯದ ಹಲವೆಡೆ ವಾಡಿಕೆಗಿಂತ ಹೆಚ್ಚಾಗಿದ್ದು, ಅತಿವೃಷ್ಟಿಯಾಗಿದೆ. ನದಿಗಳಲ್ಲಿ ಪ್ರವಾಹ ಉಂಟಾಗಿ ಬೆಳೆಹಾನಿಯಾಗಿದ್ದು ರಾಜ್ಯಸರ್ಕಾರ ಈ ತನಕ ಯಾವುದೇ ಪರಿಹಾರ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.
