ಉದಯವಾಹಿನಿ,ನವದೆಹಲಿ: ಇನ್ನು 8 ವಾರಗಳಲ್ಲಿ ಇಡೀ ದೆಹಲಿಯನ್ನು ಬೀದಿನಾಯಿಗಳಿಂದ ಮುಕ್ತಗೊಳಿಸುವಂತೆ ದೆಹಲಿ ಸರ್ಕಾರ, ದೆಹಲಿ ಮಹಾನಗರ ಪಾಲಿಕೆ (MCD) ಹಾಗೂ ನವದೆಹಲಿ ಮಹಾನಗರ ಪಾಲಿಕೆಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ದೆಹಲಿಯ ಎಲ್ಲಾ ಪ್ರದೇಶಗಳನ್ನು ಬೀದಿನಾಯಿ ಮುಕ್ತ ಮಾಡಬೇಕು, ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಹೇಳಿದೆ.8 ವಾರಗಳ ಒಳಗೆ ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಇದಕ್ಕಾಗಿ ಒಂದು ಕಾರ್ಯಪಡೆ ರಚಿಸುವ ಅಗತ್ಯವಿದ್ದರೇ ಕೂಡಲೇ ಆ ಕೆಲಸ ಮಾಡಿ. ಈ ಪ್ರಕ್ರಿಯೆಯನ್ನು ತಡೆಯುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ವಾರ್ನಿಂಗ್ ಕೊಟ್ಟಿದೆ.
ರಾಷ್ಟ್ರ ರಾಜಧಾನಿ ಪ್ರದೇಶದ ಎಲ್ಲ ಸ್ಥಳಗಳಿಂದ ಬೀದಿ ನಾಯಿಗಳನ್ನ ತೆರವು ಮಾಡಬೇಕು. ಈ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಾಣಿ ದಯಾ ಹೋರಾಟಗಾರರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು. ದೆಹಲಿ ಸರ್ಕಾರ, ಎಂಸಿಡಿ, ಎನ್ಡಿಎಂಸಿಗಳು 8 ವಾರಗಳಲ್ಲಿ ಶ್ವಾನ ಆಶ್ರಯ ಕೇಂದ್ರಗಳನ್ನು ರಚಿಸಬೇಕು. ಈ ಕೇಂದ್ರಗಳನ್ನು ಸಿಸಿಟಿವಿ ಮೂಲಕ ಮೇಲ್ವಿಚಾರಣೆ ಮಾಡಬೇಕು ಎಂದು ಕೋರ್ಟ್ ಹೇಳಿದೆ.
