ಉದಯವಾಹಿನಿ, ಹಾಸನ: ಕೂಲಿ ಸಿನಿಮಾ  ನೋಡಲು 110 ಕಿ.ಮೀ ವೇಗದಲ್ಲಿ ಕಾರು ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ  ಜಿಲ್ಲೆಯ ಅರಕಲಗೂಡು  ತಾಲೂಕಿನ ಬಸವಾಪಟ್ಟಣದ ಸಮೀಪದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ದರ್ಶನ್ (25), ಬಡಿಗೆ ಕೆಲಸ ಮಾಡುತ್ತಿದ್ದ ರಂಗನಾಥ ಪ್ರಸಾದ್ (22) ಮೃತ ಯುವಕರು.ಮೈಸೂರಿನಲ್ಲಿ ಕೂಲಿ ಸಿನಿಮಾ ನೋಡಲು ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಿದ್ದರು. ಎಂಟು ಗಂಟೆಗೆ ಹೋಗಬೇಕಿದ್ದ ಕಾರಣ KA-53-MA-1196 ನಂಬರ್‌ನ ಕಾರಿನಲ್ಲಿ ಕೊಣನೂರು ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದರು. ಈ ವೇಳೆ ಗಂಟೆಗೆ 110 ಕಿ.ಮೀ ವೇಗದಲ್ಲಿ ಕಾರನ್ನು ಚಲಾಯಿಸುತ್ತಿದ್ದರು. ಪರಿಣಾಮ ಬಸವಾಪಟ್ಟಣ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಅಪಘಾತದಲ್ಲಿ ಮೃತ ದರ್ಶನ್ ಸಹೋದರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!