ಉದಯವಾಹಿನಿ, ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಎಸ್ಐಟಿ ತನಿಖೆಯ ಬಗ್ಗೆ ಇಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉತ್ತರ ನೀಡಲಿದ್ದಾರೆ.ಸದನದಲ್ಲಿ ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ನಡೆಸಿರುವವರ ಹೆಸರು ಬಹಿರಂಗಪಡಿಸಬೇಕು. ಮುಸುಕುಧಾರಿ ವ್ಯಕ್ತಿಯನ್ನು ಬಂಧಿಸಿ ಎಸ್ಐಟಿ ತನಿಖೆಯ ಮಧ್ಯಂತರ ವರದಿಯನ್ನು ಮಂಡಿಸಬೇಕು ಎಂದು ವಿಪಕ್ಷ ನಾಯಕರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಗೃಹ ಸಚಿವರು ಎಸ್ಐಟಿ (SIT) ತನಿಖೆಯ ಬಗ್ಗೆ ಏನು ಹೇಳುತ್ತಾರೆ? ಈ ಪ್ರಕರಣದಲ್ಲಿ ಸರ್ಕಾರದ ನಿಲುವೇನು ಎಂಬುದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ.ಅನಾಮಿಕ ವ್ಯಕ್ತಿ ನೀಡಿದ ದೂರಿನ ಮೇಲೆ ಎಸ್ಐಟಿ ರಚನೆ ಮಾಡಿರುವುದು, ಧರ್ಮಸ್ಥಳದಲ್ಲಿ ಹೂತಿಟ್ಟಿರುವ ಶವಗಳಿಗಾಗಿ 15ಕ್ಕೂ ಹೆಚ್ಚು ದಿನಗಳಿಂದ ಗುಂಡಿ ಅಗೆದು ಏನೂ ಸಿಗದ ವಿಚಾರವಾಗಿ ಬಿಜೆಪಿ ನಾಯಕರು ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಸಬಹುದು. ಜೊತೆಗೆ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ನಡೆದಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಒಪ್ಪಿಕೊಂಡಿರುವುದು. ಇವೆಲ್ಲವೂ ಸದನದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳಿವೆ.
