ಉದಯವಾಹಿನಿ, ವಿಜಯಪುರ: ಮಹಾರಾಷ್ಟ್ರದಲ್ಲಿ ಮಳೆಯಬ್ಬರ ಜೋರಾಗಿರುವ ಹಿನ್ನೆಲೆ ಕೃಷ್ಣಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಧಾರಾಕಾರ ಮಳೆಯಾದ ಹಿನ್ನೆಲೆ ವಿಜಯಪುರ ಜಿಲ್ಲೆಯ ನಿಡಗುಂದಿಯಲ್ಲಿರುವ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, 2,45,000 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ 26 ಗೇಟ್ಗಳ ಮೂಲಕ ನಾರಾಯಣಪುರ ಜಲಾಶಯಕ್ಕೆ 2,50,000 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.ಇನ್ನೂ ನಾರಾಯಣಪುರ ಜಲಾಶಯದಿಂದಲೂ ಭಾರೀ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರನ್ನ ಹರಿಬಿಡಲಾಗುತ್ತಿದ್ದು, ರಾಯಚೂರಿನ ದೇವದುರ್ಗದ ಐತಿಹಾಸಿಕ ಕೊಪ್ಪರ ಲಕ್ಷ್ಮೀ ನರಸಿಂಹ ದೇವಾಲಯ ಸಂಪೂರ್ಣ ಜಲಾವೃತವಾಗಿದೆ.
ನೂರಾರು ವರ್ಷಗಳ ಇತಿಹಾಸವಿರುವ ಲಕ್ಷ್ಮೀ ನರಸಿಂಹ ದೇವಾಲಯ ಸುತ್ತಲೂ ನೀರು ಆವರಿಸಿದೆ. ದೇವಾಲಯ ಬಳಿ ರಭಸವಾಗಿ ನೀರು ಹರಿಯುತ್ತಿದ್ದು, ಭಕ್ತರು ದೇವಾಲಯ ಬಳಿ ಸುಳಿಯದಂತಾಗಿದೆ. ಅರ್ಚಕರು ಪೂಜೆ ಮಾಡಲು ಹರಸಾಹಸ ಪಡುತ್ತಿದ್ದಾರೆ. ಕೃಷ್ಣಾ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದರೆ ದೇವಾಲಯ ಮುಳುಗಡೆಯಾಗಲಿದೆ. ಈಗಾಗಲೇ ದೇವದುರ್ಗ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ.
