ಉದಯವಾಹಿನಿ, ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದರು. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಅರಮನೆಯಲ್ಲಿ ಬೆಳ್ಳಿ ತಟ್ಟೆಯಲ್ಲಿ ಗಣ್ಯರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಎಳನೀರು, ಕಿವಿ, ಪ್ಲಮ್ ಮತ್ತು ಪಪ್ಪಾಯಿ ಸೇರಿದಂತೆ ಹಲವು ಹಣ್ಣುಗಳು ಇಡಲಾಗಿತ್ತು. ಸಾಂಪ್ರದಾಯಿಕ ಮೈಸೂರು ಭಕ್ಷ್ಯಗಳಾದ, ಮೈಸೂರು ಮಸಾಲೆ ದೋಸೆ, ಇಡ್ಲಿ, ಸಾಂಬರ್, ಚಟ್ನಿ, ಶ್ಯಾವಿಗೆ ಉಪ್ಪಿಟ್ಟು, ಸಬ್ಬಕ್ಕಿ ವಡೆ, ಮೈಸೂರು ಪಾಕ್, ಗೋಧಿ ಹಾಲ್ಬಾಯಿ ಮತ್ತು ಬಾದಾಮ್ ಹಲ್ವಾವನ್ನು ಗಣ್ಯರಿಗೆ ಬಡಿಸಲಾಯಿತು. ಜೊತೆಗೆ ರಾಗಿ ಮತ್ತು ಗೋಧಿ ಬಿಸ್ಕೆಟ್, ಚಹಾ ಮತ್ತು ಕಾಫಿ ನೀಡಲಾಯಿತು.
