ಉದಯವಾಹಿನಿ, ನವದೆಹಲಿ: ಕೇತಗಾನಹಳ್ಳಿ ಭೂಒತ್ತುವರಿ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ರಿಲೀಫ್ ಸಿಕ್ಕಿದೆ. 2 ವಾರ ತಹಶೀಲ್ದಾರ್ ಸಮನ್ಸ್ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ತನಿಖೆ ಮುಂದುವರಿಸಲು ತಹಶೀಲ್ದಾರ್ ಅವರಿಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ಎರಡು ವಾರಗಳ ಕಾಲ ತಡೆಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಪರಿಹಾರ ನೀಡಿದೆ.ಸೆಪ್ಟೆಂಬರ್ 8 ರಂದು ವಿಭಾಗೀಯ ಪೀಠ ನೀಡಿದ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಮತ್ತು ನ್ಯಾಯಮೂರ್ತಿ ಪ್ರಸನ್ನ ವರಾಲೆ ಅವರಿದ್ದ ನ್ಯಾಯಪೀಠವು ನಡೆಸಿತು. ಹಿರಿಯ ವಕೀಲರಾದ ಆರ್ಯಮ ಸುಂದರಂ, ಬಾಲಾಜಿ ಶ್ರೀನಿವಾಸನ್ ಮತ್ತು ಶ್ರೀ ನಿಶಾಂತ್ ಎ.ವಿ. ಕುಮಾರಸ್ವಾಮಿ ಅವರ ಪರವಾಗಿ ಹಾಜರಾಗಿ ವಾದ ಮಂಡನೆ ಮಾಡಿದರು.
ಪ್ರಕರಣದ ಹಿನ್ನೆಲೆ: ಕರ್ನಾಟಕ ಸರ್ಕಾರದಿಂದ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮತ್ತು ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಸಂಬಂಧಿತ ಪ್ರಕ್ರಿಯೆಗಳಿಗೆ ಸಂಬಂಧಿಸಿದ ವಿವಾದ ಇದು. ಕರ್ನಾಟಕ ಹೈಕೋರ್ಟ್ನ ಏಕ ಸದಸ್ಯ ನ್ಯಾಯಪೀಠವು ಈ ಹಿಂದೆ ವಿಚಾರಣೆ ನಡೆಸಿ ಎಸ್ಐಟಿ ರಚನೆ ಮತ್ತು ತಹಶೀಲ್ದಾರ್ ಹೊರಡಿಸಿದ ನೋಟಿಸ್ ಎರಡನ್ನೂ ತಡೆಹಿಡಿದಿತ್ತು. ಎಸ್ಐಟಿ ರಚನೆಯೂ ಕಾಯ್ದೆಗೆ (ಸೆಕ್ಷನ್ 195) ಅನುಗುಣವಾಗಿಲ್ಲ ಎಂದು ತೀರ್ಪು ನೀಡಿತ್ತು.
