ಉದಯವಾಹಿನಿ, ಡೆಹ್ರಾಡೂನ್: ವ್ಯಕ್ತಿಯೊಬ್ಬ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಇದ್ದಕ್ಕಿದ್ದಂತೆ ನೀರು ಉಕ್ಕಿಹರಿದಿದೆ. ತನ್ನ ಜೀವವನ್ನು ಉಳಿಸಿಕೊಳ್ಳಲು ಆತ ವಿದ್ಯುತ್ ಕಂಬವನ್ನು ಏರಿ, ಸಹಾಯಕ್ಕಾಗಿ ಅಂಗಲಾಚಿದ ಘಟನೆ ಉತ್ತರಾಖಂಡ ಪ್ರೇಮನಗರದ ಠಾಕೂರ್ಪುರದಲ್ಲಿ ನಡೆದಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (ಎನ್ಡಿಆರ್ಎಫ್) ಆತನನ್ನು ರಕ್ಷಿಸುವಲ್ಲಿ ಯಶಸ್ವಿಯಾಯಿತು ಎಂದು ತಿಳಿದು ಬಂದಿದೆ. ಇದರ ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯ ನಾಲ್ಕು ಗ್ರಾಮಗಳಲ್ಲಿ ಭಾರಿ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹದಲ್ಲಿ 40 ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದ್ದು, ಆರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕುಂಟಾರಿ ಲಗಾಫಾಲಿಯಲ್ಲಿ ನಾಲ್ವರು ಮತ್ತು ಧುರ್ಮಾ ಗ್ರಾಮದಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಡೆಹ್ರಾಡೂನ್ನ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್ಇಒಸಿ) ತಿಳಿಸಿದೆ.
ಘಟನೆಯಲ್ಲಿ ಒಟ್ಟು 12 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಗಂಭೀರ ಗಾಯಗೊಂಡವರನ್ನು ರಿಷಿಕೇಶದಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ವಿಮಾನದ ಮೂಲಕ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ವಿಡಿಯೊವನ್ನು ಹವಾಮಾನ ಮತ್ತು ಪ್ರವಾಹ ಸಂಶೋಧಕ ಮತ್ತು ತಂತ್ರಜ್ಞಾನ ವೃತ್ತಿಪರ ನವೀನ್ ರೆಡ್ಡಿ ಅವರು ನಲ್ಲಿ ಹಂಚಿಕೊಂಡಿದ್ದಾರೆ.
