ಉದಯವಾಹಿನಿ, ಹಾಸನ: ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಬೇಲೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಅವರನ್ನು ಅಮಾನತುಗೊಳಿಸಲಾಗಿದೆ.ರಾಜೇಗೌಡ ವಿರುದ್ಧದ ಕರ್ತವ್ಯ ಲೋಪ, ಭ್ರಷ್ಟಾಚಾರ, ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳು ಮೇಲ್ನೋಟಕ್ಕೆ ಸತ್ಯಕ್ಕೆ ಹತ್ತಿರವಿದೆ. ಈ ಸಂಬಂಧ ಹಾಸನ ಡಿಡಿಪಿಐ ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಜೊತೆಗೆ ಬಿಇಓ ರಾಜೇಗೌಡ ವಾಗ್ವಾದ ನಡೆಸಿದ್ದರು. ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಿದ್ದಕ್ಕೆ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಶಾಸಕರ ಜೊತೆ ವೇದಿಕೆಯಲ್ಲೇ ಅವರು ವಾಗ್ವಾದ ಮಾಡಿದ್ದರು.
