ಉದಯವಾಹಿನಿ, ತುಮಕೂರು: ತುಮಕೂರು ದಸರಾ ಹಿನ್ನೆಲೆ ಸೆ.30 ರಂದು ಸಂಜೆ ನಡೆಯುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟರಾದ ವಿ ರವಿಚಂದ್ರನ್ ಹಾಗೂ ನಟಿ ರಮ್ಯಾ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 2ರಂದು ನಡೆಯಲಿರುವ ವೈಭವಯುತ ಮೆರವಣಿಗೆಯಲ್ಲಿ ಜಂಬೂ ಸವಾರಿಯೊಂದಿಗೆ ಸಾರೋಟಿನಲ್ಲಿ 50 ಗ್ರಾಮ ದೇವತೆಗಳು ಸಾಗಲಿವೆ. ಈ ಬಾರಿ ಜಿಲ್ಲೆಯ ಸಾಂಸ್ಕೃತಿಕ, ಸಾಹಿತ್ಯ, ಕಲಾ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಎರಡನೇ ಬಾರಿ ತುಮಕೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ ಎಂದು ಹೇಳಿದರು.
ದಸರಾ ಉತ್ಸವವು ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಉತ್ಸವವನ್ನು ನೋಡಲು ಸಾರ್ವಜನಿಕರಿಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪ್ರತೀ ದಿನ 250 ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ದಸರಾ ಪ್ರಯುಕ್ತ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 22ರಂದು ಬೆಳಿಗ್ಗೆ 9:30ಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಅವರು ಧಾರ್ಮಿಕ ಉತ್ಸವ, ನವರಾತ್ರಿ ಉತ್ಸವ, ಧ್ವಜಾರೋಹಣ, ದುರ್ಗಾಪೂಜೆಯನ್ನು ನೆರವೇರಿಸಲಿದ್ದಾರೆ. ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಡಾ. ಹನುಮಂತನಾಥ ಮಹಾಸ್ವಾಮೀಜಿ, ಶಿವಯೋಗೀಶ್ವರ ಮಹಾಸ್ವಾಮೀಜಿ, ವೀರಪತ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ವೀರೇಶಾನಂದ ಸರಸ್ವತ ಸ್ವಾಮೀಜಿಗಳ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಸಂಸದ ವಿ. ಸೋಮಣ್ಣ, ಜನಪ್ರತಿನಿಧಿಗಳಾದ ಟಿ.ಬಿ ಜಯಚಂದ್ರ, ಎಸ್.ಆರ್ ಶ್ರೀನಿವಾಸ್, ಶಿವರಾಜ್ ತಂಗಡಗಿ, ಕೆ.ಎನ್ ರಾಜಣ್ಣ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದು, ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
