ಉದಯವಾಹಿನಿ, ರಾಮನಗರ: ರಸ್ತೆಗುಂಡಿ ಮುಚ್ಚದ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ರಾಮನಗರದ ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದರು. ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿ ಗುಂಡಿ ಮುಚ್ಚದ ಪರಿಸ್ಥಿತಿಗೆ ಬಂದು ನಿಂತಿದೆ. ಬೆಂಗಳೂರು ಈಗ ಗುಂಡಿಯೂರು ಆಗಿದೆ. ಸಾಕಷ್ಟು ಜನ ನಿತ್ಯ ರಸ್ತೆ ಗುಂಡಿಗೆ ಸಾವನ್ನಪ್ಪುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಐಟಿ ಕಂಪನಿಗಳು ಬೆಂಗಳೂರು ತೊರೆದು ಬೇರೆ ರಾಜ್ಯಕ್ಕೆ ಹೋಗುತ್ತಿವೆ. ಇಷ್ಟಾದರೂ ಗುಂಡಿ ಮುಚ್ಚದೇ ಉಪಮುಖ್ಯಮಂತ್ರಿಗಳು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೂಡಲೇ ಬೆಂಗಳೂರಿನ ಎಲ್ಲಾ ಗುಂಡಿಗಳನ್ನ ಮುಚ್ಚಿ ಮರ್ಯಾದೆ ಉಳಿಸಿಕೊಳ್ಳಿ. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
