ಉದಯವಾಹಿನಿ, ನವದೆಹಲಿ: ಆರ್ಥಿಕ ಅಕ್ರಮಗಳ ಆರೋಪದ ತನಿಖೆ ಎದುರಿಸುತ್ತಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ.
ತನಿಖೆಯ ಈ ಹಂತದಲ್ಲಿ ಆರೋಪಗಳ ಸ್ವರೂಪವು ಕಸ್ಟಡಿ ವಿಚಾರಣೆಗೆ ಅರ್ಹವಾಗಿದೆ ಎಂದು ಹೇಳಿದ ಪಟಿಯಾಲ ಹೌಸ್ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.ವಂಚನೆ, ಫೋರ್ಜರಿ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವನ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ದೆಹಲಿ ಕೋರ್ಟ್ನಿಂದ ಆದೇಶ ಹೊರಬಿದ್ದಿದೆ.
ನಕಲಿ ದಾಖಲೆ ಅಥವಾ ಎಲೆಕ್ಟ್ರಾನಿಕ್ ದಾಖಲೆಯನ್ನು ನಕಲಿಯಾಗಿ ಬಳಸಿ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳ ಅಡಿಯಲ್ಲಿ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶಾರದಾ ಪೀಠದ ಆಸ್ತಿಗಳನ್ನು ಆರ್ಥಿಕ ಲಾಭಕ್ಕಾಗಿ ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವ ಮೂಲಕ ಸರಸ್ವತಿ ಸಂಸ್ಥೆಯ ಮೇಲಿನ ತನ್ನ ನಿಯಂತ್ರಣವನ್ನು ಬಿಗಿಗೊಳಿಸಿದ್ದಾರೆ ಎಂದು ದೆಹಲಿ ಪೊಲೀಸರು ತಮ್ಮ ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ ಎಂದು ತಿಳಿದುಬಂದಿದೆ.
