ಉದಯವಾಹಿನಿ, ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಅ.7ರ ವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಇದು ಮುಂಗಾರು ಬಳಿಕ ಅರಬ್ಬಿ ಸಮುದ್ರದಲ್ಲಿ ಅಪ್ಪಳಿಸುವ ಮೊದಲ ಚಂಡಮಾರುತವಾಗಿದೆ. ಚಂಡಮಾರುತ ಬೀಸುವ ಹಿನ್ನೆಲೆ ಮುಂಬೈ ಥಾಣೆ, ಪಾಲ್ಘರ್, ರಾಯಗಡ್, ರತ್ನಗಿರಿ ಮತ್ತು ಸಿಂಧುದುರ್ಗ ಸೇರಿದಂತೆ ಮಹಾರಾಷ್ಟ್ರದ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯು ಮಹಾರಾಷ್ಟ್ರದ ಒಳಭಾಗಗಳಲ್ಲಿ, ಅದ್ರಲ್ಲೂ ಮುಖ್ಯವಾಗಿ ಪೂರ್ವ ವಿದರ್ಭ ಮತ್ತು ಮರಾಠವಾಡದ ಕೆಲ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಕೊಂಕಣದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಈ ಬೆನ್ನಲ್ಲೇ ಸ್ಥಳೀಯ ಆಡಳಿತ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿದೆ.
ಗುಜರಾತ್ಗೆ ಅಪ್ಪಳಿಸಲಿದೆ ಚಂಡಮಾರುತ: ಹವಾಮಾನ ಇಲಾಖೆ ವಿಜ್ಞಾನಿ ಅಭಿಮನ್ಯು ಚೌಹಾಣ್ ಪ್ರಕಾರ, ಈಶಾನ್ಯ ಅರೇಬಿಯನ್ ಸಮುದ್ರದಲ್ಲಿ ಚಂಮಾರುತ ತೀವ್ರಗೊಂಡಿದೆ. ಗಂಟೆಗೆ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಅಕ್ಟೋಬರ್ 6ರಂದು ಬೆಳಗ್ಗಿನ ವೇಳೆಗೆ ಚಂಡಮಾರುತವು ಗುಜರಾತ್ ಕಡೆಗೆ ಬೀಸುವ ನಿರೀಕ್ಷೆಯಿದೆ. ಆದಾಗ್ಯೂ ರಾಜ್ಯದಲ್ಲಿ ಮಳೆಯ ಪರಿಣಾಮ ಕಡಿಮೆ ಇರಲಿದ್ದು, ಗಾಳಿಯು ಗಂಟೆಗೆ 40-55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
