ಉದಯವಾಹಿನಿ, ಮೈಸೂರು: ದಸರಾ ಮುಗಿದ ನಾಲ್ಕು ದಿನದಲ್ಲಿಯೇ ನಾಡಿನ ಅಧಿದೇವತೆ, ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ಶ್ರೀ ಚಾಮುಂಡೇಶ್ವರಿ ರಥೋತ್ಸವ ಇಂದು (ಅ.6) ವೈಭವದಿಂದ ನೆರವೇರಿತು. ಕರ್ನಾಟಕದ ವಿವಿಧೆಡೆಯಿಂದ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಆಗಮಿಸಿದ್ದ ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ನೆರವೇರಿದ ಚಾಮುಂಡೇಶ್ವರಿ ದೇವಿಯ ರಥೋತ್ಸವದಲ್ಲಿ ಭಕ್ತಿ ಭಾವ ಮೇಳೈಸಿತ್ತು. ಬೃಹದಾಕಾರದ ರಥಕ್ಕೆ ವಿವಿಧ ಬಣ್ಣದ ಬಾವುಟಗಳನ್ನು ಕಟ್ಟಲಾಗಿತ್ತು. ಜೊತೆಗೆ ವಿವಿಧ ಬಗೆಯ ಹೂವುಗಳು, ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಚಾಮುಂಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಗೆ ಚಿನ್ನ, ವಜ್ರ ವೈಢೂರ್ಯದ ಆಭರಣಗಳನ್ನು ಹಾಕಿ, ವಿಶೇಷ ಅಲಂಕಾರ ಮಾಡಲಾಗಿತ್ತು. ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ದೇಗುಲದ ಸುತ್ತಲೂ ಒಂದು ಸುತ್ತು ಪ್ರದಕ್ಷಿಣೆ ಹಾಕಿದ ನಂತರ ಸರ್ವಾಲಂಕೃತ ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಅವರು ಮಹಾಮಂಗಳಾರತಿ ಮಾಡಿದ ಬಳಿಕ ರಥೋತ್ಸವ ಆರಂಭವಾಯಿತು. ಬೆಳಗ್ಗೆ 9:55ರ ಸುಮಾರಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಶಕ್ತಿದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಹೊತ್ತ ಬೃಹತ್ ರಥ ದೇಗುಲವನ್ನು ಒಂದು ಸುತ್ತು ಪ್ರದಕ್ಷಿಣೆ ಹಾಕಿತು. ಸುಮಾರು ಒಂದು ಗಂಟೆ ಕಾಲ ಕ್ರಮಿಸಿದ ಬೃಹತ್ ರಥ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ವಸ್ಥಾನಕ್ಕೆ ಬಂದು ತಲುಪಿತು. ರಥೋತ್ಸವ ಸಾಗಿದೆಡೆಯಲ್ಲಿ ಜನರು ಕಿಕ್ಕಿರಿದು ನೆರೆದಿದ್ದರು. ರಥದ ಮೇಲೆ ಹಣ್ಣು, ಜವನ ಎಸೆದು ಹರಕೆ ತೀರಿಸಿದ ಭಕ್ತರು, ಜೈ ಚಾಮುಂಡಿ, ಉಘೇ ಉಘೇ ಚಾಮುಂಡಿ ಎಂದು ಘೋಷಣೆ ಕೂಗಿ ಭಕ್ತಿಭಾವ ತೋರಿದರು. ಸಹಸ್ರಾರು ಭಕ್ತರ ಹರ್ಷೋದ್ಘಾರಗಳ ನಡುವೆ ಅತ್ಯಂತ ವೈಭವದಿಂದ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವ ನೆರವೇರಿತು.

 

Leave a Reply

Your email address will not be published. Required fields are marked *

error: Content is protected !!