ಉದಯವಾಹಿನಿ, ನವದೆಹಲಿ: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16ರ ನಡುವೆ ಭಾರತಕ್ಕೆ ಭೇಟಿ ನೀಡಲು ಅವಕಾಶ ನೀಡಿದೆ.
2021ರ ಆಗಸ್ಟ್ನಲ್ಲಿ ತಾಲಿಬಾನ್ ಅಧಿಕಾರ ವಶಪಡಿಸಿಕೊಂಡ ನಂತರ ಮೊದಲ ಉನ್ನತ ಮಟ್ಟದ ಸಭೆ ನಡೆಯಲಿರುವ ಕಾರಣ ಭಾರತ-ಅಫ್ಘಾನ್ ಸಂಬಂಧದ ಹೊಸ ಅಧ್ಯಾಯ ತೆರೆಯಲಿದೆ.ಜೂನ್ 2022 ರಲ್ಲಿ ಹಿರಿಯ ರಾಜತಾಂತ್ರಿಕ ಜೆಪಿ ಸಿಂಗ್ ನೇತೃತ್ವದ ತಂಡ ಕಾಬೂಲ್ನಲ್ಲಿ ಅಮೀರ್ ಖಾನ್ ಮುತ್ತಕಿ ಅವರನ್ನು ಭೇಟಿಯಾಗಿದ್ದರು. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಇದು ಭಾರತದ ಮೊದಲ ಭೇಟಿಯಾಗಿತ್ತು.
