ಉದಯವಾಹಿನಿ , ದೆಹಲಿ : ಬಿಎಸ್ಎಫ್ ಮತ್ತು ಸಿಆರ್ಪಿಎಫ್ ತಮ್ಮ ತಂಡಗಳಲ್ಲಿ ಭಾರತೀಯ ತಳಿಯ ಶ್ವಾನಗಳ ಸಂಖ್ಯೆಯನ್ನು ಹೆಚ್ಚಿಸಿವೆʼ ಎಂದು ಪ್ರಧಾನಿ ಮೋದಿ ತಮ್ಮ ಮಾಸಿಕ ಮನ್ ಕಿ ಬಾತ್ ಕಾರ್ಯಕ್ರಮದ 127ನೇ ಕಂತಿನಲ್ಲಿ ಕರ್ನಾಟಕ ಮೂಲದ ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಸ್ತಾವಿಸಿದರು.”ಸುಮಾರು 5 ವರ್ಷಗಳ ಹಿಂದೆ ನಾನು ಈ ಕಾರ್ಯಕ್ರಮದಲ್ಲಿ ಭಾರತೀಯ ತಳಿಯ ನಾಯಿಗಳ ಬಗ್ಗೆ ಚರ್ಚಿಸಿದ್ದು ನಿಮ್ಮಲ್ಲಿ ಹಲವರಿಗೆ ನೆನಪಿರಬಹುದು. ಭದ್ರತಾ ಪಡೆಗಳು ನಮ್ಮ ಪರಿಸರ ಮತ್ತು ಪರಿಸ್ಥಿತಿಗಳಿಗೆ ಸುಲಭವಾಗಿ ಹೊಂದಿಕೊಳ್ಳುವಂತಹ ಭಾರತೀಯ ತಳಿಯ ನಾಯಿಗಳನ್ನು ದತ್ತು ತೆಗೆದುಕೊಳ್ಳುವಂತೆ ನಾನು ಒತ್ತಾಯಿಸಿದ್ದೆ. ನಮ್ಮ ಭದ್ರತಾ ಸಂಸ್ಥೆಗಳು ಈ ದಿಕ್ಕಿನಲ್ಲಿ ಶ್ಲಾಘನೀಯ ಪ್ರಯತ್ನಗಳನ್ನು ಮಾಡಿವೆ ಎಂದು ಹೇಳಲು ನನಗೆ ಸಂತೋಷವಾಗಿದೆ. ಬಿಎಸ್ಎಫ್ ಮತ್ತು ಸಿಆರ್ಪಿಎಫ್ ತಮ್ಮ ತುಕಡಿಯಲ್ಲಿ ಭಾರತೀಯ ತಳಿಯ ನಾಯಿಗಳ ಸಂಖ್ಯೆಯನ್ನು ಹೆಚ್ಚಿಸಿವೆ” ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿ ಅವರ ಆಶಯದಂತೆ ಬಿಎಸ್ಎಫ್ ಎರಡು ದೇಸಿ ತಳಿಗಳಾದ ಉತ್ತರ ಪ್ರದೇಶದ ರಾಂಪುರ್ ಹೌಂಡ್ ಮತ್ತು ಬಾಗಲಕೋಟೆ ಜಿಲ್ಲೆಯ ಮೂಲದ ಮುಧೋಳ ನಾಯಿಗಳಿಗೆ ತರಬೇತಿ ನೀಡಿ ತಂಡಕ್ಕೆ ಸೇರಿಸಿಕೊಳ್ಳುತ್ತಿದೆ.
ಮಧ್ಯ ಪ್ರದೇಶದ ಗ್ವಾಲಿಯರ್ನ ತೇಕನ್ಪುರದಲ್ಲಿರುವ ಬಿಎಸ್ಎಫ್ನ ರಾಷ್ಟ್ರೀಯ ಶ್ವಾನ ತರಬೇತಿ ಕೇಂದ್ರದಲ್ಲಿ ಉತ್ತರ ಪ್ರದೇಶದ ರಾಂಪುರ್ ಹೌಂಡ್ ಮತ್ತು ಮುಧೋಳ್ ನಾಯಿಗೀಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
