ಉದಯವಾಹಿನಿ, ಬೆಂಗಳೂರು: ಅಪರಾಧಿಗಳ ಜೊತೆ ಪೊಲೀಸರು ಸಂಬಂಧ ಇಟ್ಟುಕೊಳ್ಳಬಾರದು. ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಪೊಲೀಸರ ಗುರಿ ಇದೆ ಆಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಕರೆ ನೀಡಿದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ ಯುವ ಶಕ್ತಿ, ವಿದ್ಯಾರ್ಥಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ನಿಲುವು ತೆಗೆದುಕೊಳ್ಳಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ ಎಂದರು.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಸಾಧ್ಯ ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ. ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ಸ್ ಜಾಲದ ಜೊತೆ ಶಾಮೀಲಾಗಿರುತ್ತಾರೆ. ರೌಡಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ ಎಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಆತ್ಮಸಾಕ್ಷಿಯನ್ನು ಕೆದಕಿದರು.
ಡ್ರಗ್ಸ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ. ಈ ಜಾಲದ ಏಜೆಂಟರು ಯರ‍್ಯಾರಯ ಎನ್ನುವುದೂ ನಿಮಗೇ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಮಾಡಿ ತೋರಿಸಿ ಎಂದರು.

Leave a Reply

Your email address will not be published. Required fields are marked *

error: Content is protected !!