ಉದಯವಾಹಿನಿ, ಬೆಂಗಳೂರು: ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದ್ರೂ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಹೀಗಾಗಿ ಈ ಕಬ್ಬಿನ ಕಿಚ್ಚು ಆರಿಸಲು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಪ್ರವೇಶಿಸಿದ್ದಾರೆ.
ರೈತರ ಈ ಹೋರಾಟದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪತ್ರ ಬರೆದಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಗಂಭೀರ ಸಮಸ್ಯೆ ಬಗ್ಗೆ ನಿಮ್ಮೊಂದಿಗೆ ಚರ್ಚಿಸಲು ತುರ್ತು ಅವಕಾಶ ಕೋರಿ ಪತ್ರ ಬರೆಯುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.
ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸಂಧಾನಕ್ಕೆ ರಾಜ್ಯ ಸರ್ಕಾರ ನಿರಂತರ ಪ್ರಯತ್ನಿಸಿದರೂ ಹೋರಾಟ ತೀವ್ರಗೊಂಡಿದೆ. ಕಟಾವು ಮತ್ತು ಸಾರಿಗೆ ವೆಚ್ಚಗಳನ್ನು ಕಡಿತಗೊಳಿಸಿದ ನಂತರ ರೈತರಿಗೆ ಸಿಗುವ ಲಾಭ ಕಡಿಮೆ. ಪ್ರತಿ ಟನ್ಗೆ 800 ರಿಂದ 900 ರೂ. ವರೆಗೆ ವೆಚ್ಚ ಇರುತ್ತದೆ. ರೈತನಿಗೆ ತಲುಪುವ ಹಣ ಕೇವಲ ಪ್ರತಿ ಟನ್ಗೆ 2,600 ರಿಂದ 3 ಸಾವಿರ ರೂ. ಮಾತ್ರ. ಹೀಗಾಗಿ ರೈತರು ಮತ್ತು ಗ್ರಾಮೀಣ ಆರ್ಥಿಕತೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.
