ಉದಯವಾಹಿನಿ,ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.ಕೊಡಗಿನ ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಯನ್ನು ಬಲಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಆ ನಿಟ್ಟಿನಲ್ಲಿ ಪೂರ್ವ ಕಿರಿಯ ಪ್ರಾಥಮಿಕ (ಎಲ್ಕೆಜಿ, ಯುಕೆಜಿ) ಆರಂಭಿಸಲಾಗಿದೆ ಎಂದು ಸಚಿವರು ತಿಳಿಸಿದರು. ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ ಸುಮಾರು 900 ಕೆಪಿಎಸ್ ಶಾಲೆ ಆರಂಭಿಸಲು ಸರ್ಕಾರ ಮಂಜೂರಾತಿ ನೀಡಿದ್ದು, ಸಾರಿಗೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ ಎಂದು ವಿವರಿಸಿದರು.
