ಉದಯವಾಹಿನಿ, ಬೆಂಗಳೂರು: ಶುಕ್ರವಾರ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಪುತ್ರ ಉಮೇಶ್ ಅವರು ಹಿಂದೂ ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಿ ಅಂತಿಮ ಸಂಸ್ಕಾರ ನೆರವೇರಿಸಿದರು.

ಅಂತ್ಯಕ್ರಿಯೆಯ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಪೊಲೀಸರು ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ವಿ. ಸೋಮಣ್ಣ ತಿಮ್ಮಕ್ಕ ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಗೃಹ ಸಚಿವ ಡಾ ಜಿ ಪರಮೇಶ್ವರ್, ಸಚಿವರಾದ ಹೆಚ್ ಸಿ ಮಹದೇವಪ್ಪ, ಈಶ್ವರ್ ಖಂಡ್ರೆ, ವಿಪಕ್ಷ ನಾಯಕ ಆರ್ ಅಶೋಕ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ಮಕ್ಕಳಿಲ್ಲದ ನೋವನ್ನು ಮರೆಯುವ ಸಲುವಾಗಿ ಗಿಡಗಳನ್ನು ನೆಡುವ ಕಾಯಕ ಆರಂಭಿಸಿದ ತಿಮ್ಮಕ್ಕ, ಸಾವಿರಾರು ಗಿಡಗಳನ್ನು ನೆಡುವ ಮೂಲಕ ಸಮಾಜಕ್ಕೆ ಬಹುದೊಡ್ಡ ಮಾದರಿಯಾದರು. ಜೀವನದುದ್ದಕ್ಕೂ ಗಿಡಗಳನ್ನು ನೆಡುತ್ತಲೇ ಮಕ್ಕಳಂತೆ ಪ್ರೀತಿಸಿದ್ದರು. 114 ವರ್ಷ ಪರಿಸರದ ಜೊತೆಗೆ ತುಂಬು ಜೀವನ ನಡೆಸಿದ್ದರು. ಕಳೆದ ಒಂದು ತಿಂಗಳಿಂದ ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ನ.14 ರಂದು ಇಹಲೋಕ ತ್ಯೆಜಿಸಿದ್ದರು.

Leave a Reply

Your email address will not be published. Required fields are marked *

error: Content is protected !!