ಉದಯವಾಹಿನಿ, ವಿಶಾಖಪಟ್ಟಣ: ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯ ಅರಣ್ಯ ಪ್ರದೇಶದಲ್ಲಿಂದು ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ ಮದ್ವಿ ಹಿದ್ಮಾ ಆತನ ಪತ್ನಿ ಸೇರಿ 6 ಮಂದಿ ಹತ್ಯೆಗೀಡಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಹತ್ಯೆಯಾದ ನಕ್ಸಲರ ಗುರುತು ಮತ್ತು ಗಾಯಗೊಂಡವರ ವಿವರಗಳನ್ನ ಕಲೆಹಾಕಲಾಗುತ್ತಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ತಿಳಿಸಿದ್ದಾರೆ.
ಕಳೆದ ಆರು ತಿಂಗಳಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನಡೆದ 2ನೇ ಪ್ರಮುಖ ಎನ್ಕೌಂಟರ್ ಇದಾಗಿದೆ. ಇದೇ ವರ್ಷ ಮೇ 7ರಂದು ವೈ. ರಾಮಾವರಂ ಮಂಡಲ ಅರಣ್ಯ ಪ್ರದೇಶದಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದರು.
