ಉದಯವಾಹಿನಿ, ಗದಗ: ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ, ಮಳೆಯಿಂದ ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ, ಬೆಳೆ ವಿಮೆ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ ಐದು ದಿನಗಳಿಂದ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸದ ಕಾರಣ ಇಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಕರೆ ನೀಡಿದ್ದಾರೆ. ಬಂದ್ ಆಚರಣೆಗೆ ಜಿಲ್ಲೆಯ ವಿವಿಧ ರೈತ ಸಂಘಟನೆಗಳು, ಕನ್ನಡ ಸಂಘಟನೆಗಳು, ವ್ಯಾಪಾರಸ್ಥರು ಸಾಥ್ ನೀಡಿದ್ದಾರೆ. ರೈತರ ಹೋರಾಟದ ಕಿಚ್ಚು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಇಂದು ಲಕ್ಷ್ಮೇಶ್ವರ ಬಂದ್ ಪ್ರಯುಕ್ತ, ಪಟ್ಟಣದ ಅಂಗನವಾಡಿ ಕೇಂದ್ರಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಗದಗ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ರಿಂದ ರಜೆ ಘೋಷಣೆ ಆದೇಶಿಸಿದ್ದಾರೆ.
ಇನ್ನು ಸ್ವಯಂ ಪ್ರೇರಿತವಾಗಿ ಲಕ್ಷ್ಮೇಶ್ವರ ಪಟ್ಟಣದ ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಅಂತರ ಜಿಲ್ಲೆ ಬಸ್ ಸಂಚಾರ ಮಾತ್ರ ಆರಂಭವಾಗಿದ್ದು, ಲಕ್ಷ್ಮೇಶ್ವರ ತಾಲೂಕಿನ ಕೆಲವು ಗ್ರಾಮಗಳಿಗೆ ಬಸ್ ಸಂಚಾರ ಬಂದ್ ಆಗಿವೆ. ರೈತರ ಬೇಡಿಕೆಗಳು ಈಡೇರಿಸುವ ವರೆಗೆ ಹೋರಾಟ ಮಾಡುವುದಾಗಿ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್ ಕಲ್ಪಿಸಲಾಗಿದೆ.
