ಉದಯವಾಹಿನಿ, ಶ್ರೀನಗರ: ವೈಟ್‌ ಕಾಲರ್‌ ಭಯೋತ್ಪಾದನೆ ಮಾಡ್ಯೂಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ರಾಜ್ಯ ತನಿಖಾ ಸಂಸ್ಥೆಯು ಶನಿವಾರ ಓರ್ವ ಶಂಕಿತನನ್ನ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯನ್ನ ಜಮ್ಮು-ಕಾಶ್ಮೀರದ ಬಟಮಾಲೂ ಪ್ರದೇಶದ ನಿವಾಸಿ ತುಫೈಲ್ ನಿಯಾಜ್ ಭಟ್ ಎಂದು ಗುರುತಿಸಲಾಗಿದೆ. ʻವೈಟ್‌ ಕಾಲರ್‌ʼ ಭಯೋತ್ಪಾದನೆ ಮಾಡ್ಯುಲ್‌ ಪ್ರಕರಣ ತನಿಖೆಯ ಭಾಗವಾಗಿ ನಿಯಾನ್‌ನನ್ನ ಬಂಧಿಸಲಾಗಿದೆ.
ಕಳೆದ ಅ.27ರಂದು ಶ್ರೀನಗರದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನ ಬೆಂಬಲಿಸುವ ಪೋಸ್ಟರ್‌ಗಳು ಕಾಣಿಸಿದ್ದವು. ಈ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದಾಗ ವೈದ್ಯ ಆದಿಲ್ ಅಹ್ಮದ್ ರಾಥರ್ ಪೋಸ್ಟರ್ ಅಂಟಿಸುತ್ತಿರುವುದು ಬೆಳಕಿಗೆ ಬಂದಿತ್ತು. ಅದರಂತೆ ಶ್ರೀನಗರ ಪೊಲೀಸರು ಯುಎಪಿಎ ಕಾಯ್ದೆಯ (ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆ) ಸೆಕ್ಷನ್‌ 13,16, 17, 18, 18-ಬಿ, 19, 20, 23, 39 &40, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 61 (2), 147, 148, 152, 351(2) ಹಾಗೂ ಸ್ಫೋಟಕ ವಸ್ತು ಕಾಯ್ದೆ ಸೆಕ್ಷನ್‌ 4/5 ಮತ್ತು ಶಸ್ತ್ರಾಸ್ತ್ರ ನಿಷೇಧ ಕಾಯ್ದೆ ಸೆಕ್ಷನ್‌ 7/25/27 ಅಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿತ್ತು. ಇದರ ಬೆನಲ್ಲೇ ಇಬ್ಬರು ವೈದ್ಯರು ಸೇರಿದಂತೆ 7 ಉಗ್ರರನ್ನು ಬಂಧಿಸಿದ್ದು, ʻವೈಟ್‌ ಕಾಲರ್‌ ಭಯೋತ್ಪಾದಕ ಜಾಲʼವನ್ನ ಬಯಲಿಗೆಳೆಯಲಾಗಿತ್ತು. ಅನೇಕ ವೃತ್ತಿಪರರು ಹಾಗೂ ವಿದ್ಯಾರ್ಥಿಗಳೂ ಇದರಲ್ಲಿ ಸಕ್ರಿಯವಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!