ಉದಯವಾಹಿನಿ, ನವದೆಹಲಿ: ನಾಳೆಯಿಂದ ಸಂಸತ್ನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನವು ನಾಳೆಯಿಂದ ಪ್ರಾರಂಭವಾಗಿ ಡಿಸೆಂಬರ್ 19 ರವರೆಗೆ ನಡೆಯಲಿದೆ.
ಈ 19 ದಿನಗಳ ಅವಧಿಯಲ್ಲಿ ಒಟ್ಟು 15 ಕಲಾಪಗಳು ನಡೆಯಲಿವೆ. ಡಿಸೆಂಬರ್ 5 ಮತ್ತು 19 ರಂದು ಖಾಸಗಿ ಸದಸ್ಯರ ಮಸೂದೆಗಳನ್ನು ಮತ್ತು ಡಿಸೆಂಬರ್ 12 ರಂದು ಖಾಸಗಿ ಸದಸ್ಯರ ನಿರ್ಣಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಈ ಬಾರಿಯ ಅಧಿವೇಶನದಲ್ಲಿ ಪ್ರಮುಖ ಶಾಸಕಾಂಗ ಮತ್ತು ಹಣಕಾಸು ವ್ಯವಹಾರಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಈ ಕಾರ್ಯಸೂಚಿಯ ಭಾಗವಾಗಿ, ರಾಷ್ಟ್ರಪತಿಯವರು ಆರೋಗ್ಯ ಭದ್ರತೆ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, ಮಣಿಪುರ ಸರಕು ಮತ್ತು ಸೇವಾ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರೀಯ ಅಬಕಾರಿ (ತಿದ್ದುಪಡಿ) ಮಸೂದೆ ಸೇರಿದಂತೆ ಹಲವಾರು ಪ್ರಮುಖ ಮಸೂದೆಗಳನ್ನು ಮಂಡಿಸಲು ಶಿಫಾರಸು ಮಾಡಿದ್ದಾರೆ.
ಅಧಿವೇಶನದ ಹಿನ್ನೆಲೆಯಲ್ಲಿ ಇಂದು ಆಡಳಿತರೂಢ ಎನ್ಡಿಎ ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿ ಸುಗಮ ಕಲಾಪಕ್ಕೆ ಮನವಿ ಮಾಡಿತು. ಇತ್ತ ವಿರೋಧ ಪಕ್ಷಗಳು ತಯಾರಿ ನಡೆಸಿದ್ದು, ನಾಳೆ ಸಂಸತ್ತಿನಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಇಂಡಿಯಾ ಮೈತ್ರಿಕೂಟದ ಸದನ ನಾಯಕರ ಸಭೆಯನ್ನು ಕರೆಯಲಾಗಿದೆ.
ಕಾಂಗ್ರೆಸ್ ಪಕ್ಷವು ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುನರಾವರ್ತಿತ ಹೇಳಿಕೆಗಳು, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR), ಮತ್ತು ಚೀನಾದೊಂದಿಗಿನ ವ್ಯಾಪಾರ ಒಪ್ಪಂದಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚೆಗೆ ಒತ್ತಾಯಿಸುವ ಸಾಧ್ಯತೆಯಿದೆ. ಅಲ್ಲದೇ ದೆಹಲಿ ಸ್ಫೋಟ ಹಾಗೂ ಮಾಲಿನ್ಯದ ಬಗ್ಗೆ ವಿಪಕ್ಷಗಳು ಧ್ವನಿ ಎತ್ತಲಿವೆ.
