ಉದಯವಾಹಿನಿ, ನವದೆಹಲಿ: ದೆಹಲಿಯ ವಾಯುಮಾಲಿನ್ಯದಿಂದ ಮಕ್ಕಳು ಸಾಯುತ್ತಿದ್ದಾರೆ. ನನ್ನಂತಹ ವೃದ್ಧರಿಗೆ ತೊಂದರೆಯಾಗುತ್ತಿದೆ. ಈ ಸಂಬಂಧ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಬಗ್ಗೆ ಸಂಸತ್ ಭವನದ ಆವರಣದಲ್ಲಿ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದರು. ಸೋನಿಯಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಪ್ರಿಯಾಂಕಗಾಂಧಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಮಕರ ದ್ವಾರದ ಹೊರಗೆ ಸಾಂಕೇತಿಕವಾಗಿ ಮಾಸ್ಕ್ ಧರಿಸಿ, ಘೋಷಣೆ ಕೂಗಿದರು. ಪ್ರಧಾನಮಂತ್ರಿ ಅವರು ಹೇಳಿಕೆ ನೀಡುವುದನ್ನು ನಿಲ್ಲಿಸಿ, ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ.
ತಿಭಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸೋನಿಯಾ ಗಾಂಧಿ, ಮಕ್ಕಳು ಸಾಯುತ್ತಿದ್ದಾರೆ. ನನ್ನಂತಹ ವೃದ್ಧರಿಗೆ ತೊಂದರೆಯಾಗುತ್ತಿದೆ. ಸರ್ಕಾರ ಕ್ರಮ ಕೈಗೊಳ್ಳಬೇಕು. ವಾಯುಮಾಲಿನ್ಯಕ್ಕೆ ಸಂಬಂಧಿಸಿದಂತೆ ಏನನ್ನಾದರು ಮಾಡಬೇಕಾಗಿರುವುದು ಸರ್ಕಾರ ಜವಾಬ್ದಾರಿಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ವಾಯುಮಾಲಿನ್ಯದ ವಿಷಯ ರಾಜಕೀಯವಲ್ಲ. ಇದರ ಕುರಿತು ಚರ್ಚೆಯಾಗಬೇಕು ಮತ್ತು ಸರಿಯಾದ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
