ಉದಯವಾಹಿನಿ, ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದು ಉದ್ಘಾಟಿಸಿದರು. ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಲೋವರ್ ಬೇಸ್ಮೆಂಟ್ನಲ್ಲಿ 58 ಕಾರುಗಳು ಹಾಗೂ ಅಪ್ಪರ್ ಬೇಸ್ಮೆಂಟ್ನಲ್ಲಿ 38 ಕಾರುಗಳ ನಿಲುಗಡೆಗೆ ಜಾಗ ಕಲ್ಪಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಈ ಸಂದರ್ಭದಲ್ಲಿ ಇದ್ದರು.
ಇದೇ ವೇಳೆ, ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರು ಕೆ.ಐ.ಎ.ಡಿ.ಬಿ.ಯ 2 ಕೋಟಿ ರೂ. ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಹಿಂದೆ ಕೈಗಾರಿಕಾ ಸಚಿವರಾಗಿದ್ದಾಗ ಈ ಕಟ್ಟಡ ಕಟ್ಟಲು ಶಾಸಕ ಆರ್.ವಿ.ದೇಶಪಾಂಡೆ ಅವರು ತೀರ್ಮಾನ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರನ್ನೂ ಸನ್ಮಾನಿಸಲಾಯಿತು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
