ಉದಯವಾಹಿನಿ, ಮುಂಬೈ: ಕಾರಿನೊಳಗೆ ವ್ಯಕ್ತಿಯೊಬ್ಬ ಸಜೀವ ದಹನವಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ನಡೆದಿದೆ. ಕೈಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ, ಸುಟ್ಟ ಯುವಕನ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮೃತನನ್ನು ಔಸಾ ತಾಂಡಾ ನಿವಾಸಿ ಗಣೇಶ್ ಚವ್ಹಾಣ್ ಎಂದು ಗುರುತಿಸಲಾಗಿದೆ. ಕೊಲೆಯಾದ ಗಣೇಶ್ ಅವರನ್ನು ಚೀಲದೊಳಗೆ ತುಂಬಿಸಿ, ಕಾರಿನಲ್ಲಿ ಕೂಡಿಡಲಾಗಿದೆ. ನಂತರ ದುಷ್ಕರ್ಮಿಗಳು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಚವ್ಹಾಣ್ ಐಸಿಐಸಿಐ ಬ್ಯಾಂಕ್ನಲ್ಲಿ ರಿಕವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅಪರಾಧ ಸ್ಥಳದಲ್ಲಿ ಪ್ರಾಥಮಿಕ ತನಿಖೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.
ಕೊಲೆಗೆ ಕಾರಣವೇನಿರಬಹುದು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ದುರ್ದೈವಿಯ ಆಪ್ತರು ಆತನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು. ಆದರೆ ಯವಕನ ಫೋನ್ ಸ್ವಿಚ್ ಆಫ್ ಆಗಿತ್ತು. ಹುಡುಕಾಟ ನಡೆಸುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ.
ಮಧ್ಯರಾತ್ರಿ 12:30ರ ಸುಮಾರಿಗೆ ಸಹಾಯವಾಣಿ 112ಕ್ಕೆ ಕರೆ ಬಂತು. ವನವಾಡ ರಸ್ತೆಯಲ್ಲಿ ಕಾರು ಹೊತ್ತಿ ಉರಿಯುತ್ತಿದೆ ಎಂದು ಕರೆ ಮಾಡಿದವರು ತಿಳಿಸಿದರು. ನಮ್ಮ ಸಿಬ್ಬಂದಿ ಮತ್ತು ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತಲುಪಿದರು. ನಂತರ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಅವರು ಬೆಂಕಿಯನ್ನು ನಂದಿಸಿದರು. ಈ ವೇಳೆ ಕಾರಿನೊಳಗೆ ಸುಟ್ಟ ದೇಹ ಪತ್ತೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟು ಹೋಗಿತ್ತು. ನಾವು ವೈದ್ಯಕೀಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ್ದೇವೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
