ಉದಯವಾಹಿನಿ, ಬೆಳಗಾವಿ: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಪಾಸ್ ಮಾಡುವಲ್ಲಿ ಯಶಸ್ವಿಯಾಗಿದೆ. ಸರ್ಕಾರ ಮಂಡಿಸಿದ್ದ ಮಸೂದೆಗೆ ವಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ವಿಧೇಯಕದ ಪ್ರತಿಗಳನ್ನು ಹರಿದು ಬಿಸಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಗದ್ದಲದ ನಡುವೆಯೇ ಮಸೂದೆಯನ್ನು ಸರ್ಕಾರ ಪಾಸ್ ಮಾಡಿಕೊಂಡಿತು.
ಮೊದಲು ಮಸೂದೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ವಿವರಣೆ ನೀಡಿ, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನ ಸಮಾಜಕ್ಕೆ ನೋವಾಗುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇದರ ಪ್ರಮಾಣ ಜಾಸ್ತಿಯಾಗಿ ಕೊಲೆಗಳು, ಹೊಡೆದಾಟಗಳು ನಡೆದಿವೆ. ಇದನ್ನು ನಿಯಂತ್ರಣ ಮಾಡಬೇಕಾಗಿದೆ ಎಂದರು.
ಸಾಮಾಜಿಕ, ರಾಜಕೀಯ ಸಭೆಗಳಲ್ಲಿ ಆಡುವ ದ್ವೇಷದ ಮಾತುಗಳು ಮತ್ತೊಂದು ಸಮುದಾಯದ ಮೇಲೆ ಪರಿಣಾಮ ಬೀರುತ್ತಿದೆ. ದ್ವೇಷ ಭಾಷಣದಲ್ಲಿ ಮತ್ತೊಂದು ಸಮುದಾಯದ ಬಗ್ಗೆ ಕೆಟ್ಟ ಮಾತುಗಳನ್ನು ಆಡಲಾಗಿದೆ. ದ್ವೇಷ ಭಾಷಣ ಮಾಡುವ ವ್ಯಕ್ತಿಗಳಿಗೆ ಎಷ್ಟು ದಿನ ನಿರ್ಬಂಧ ಹೇರಲು ಸಾಧ್ಯ? ಹೀಗಾಗಿ ಕಾನೂನು ತರಲಾಗಿದೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
