ಉದಯವಾಹಿನಿ, ಬೆಂಗಳೂರು:  ರಾಜ್ಯಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.ಇದೇ ವೇಳೆ ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಮೊದಲ ಮೂರು ದಿನ ಯೆಲ್ಲೊ ಹಾಗೂ ಕೊನೆಯ ಎರಡು ದಿನ ಆರೇಂಜ್ ಅಲರ್ಟ್ ನೀಡಿದೆ. ಹವಾಮಾನ ಇಲಾಖೆ ಮೊದಲ ಮೂರು ದಿನ ಹಳದಿ ಅಲರ್ಟ್ ಘೋಷಿಸಿದೆ.ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ಜುಲೈ ೧೪ರಿಂದ ಈ ಭಾಗದಲ್ಲಿ ಮಳೆಯ ತೀವ್ರತೆ ಕೊಂಚ ತಗ್ಗಿತ್ತು. ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿರುವ ವರದಿಗಳಿವೆ.
ಉಳಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆಯಾಗದೇ ರೈತರು ಕಂಗಾಲಾಗಿದ್ದರು.ಜೂನ್ ಎರಡನೇ ವಾರದಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ ರೈತರು ಬೆಳೆ ಒಣಗುವ ಆತಂಕದಲ್ಲಿದ್ದರು. ಆದರೆ ಈಗ ಹವಾಮಾನ ಇಲಾಖೆ ನೀಡಿದ ವರದಿಯಂತೆ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

Leave a Reply

Your email address will not be published. Required fields are marked *

error: Content is protected !!